ಮಡಿಕೇರಿ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಇದೇ ತಿಂಗಳು ೨೬ ರಿಂದ ೨೮ ರವರೆಗೆ ಮೂರು ದಿನಗಳ ಕಾಲ ನಗರದ ಹಾಪ್ಕಾಮ್ಸ್ ಆವರಣದಲ್ಲಿ ಮಾವು ಮತ್ತು ಹಲಸು ಮೇಳ ನಡೆಯಲಿದ್ದು, ಈ ಅವಕಾಶವನ್ನು ಗ್ರಾಹಕರು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ತಿಳಿಸಿದ್ದಾರೆ. ಮಾವು ಮತ್ತು ಹಲಸು ಮೇಳಕ್ಕೆ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು ಹೀಗೆ ವಿವಿಧ ಜಿಲ್ಲೆಗಳಿಂದ ಮಾವು ಮತ್ತು ಹಲಸು ಬೆಳೆಗಾರರು ಪಾಲ್ಗೊಳ್ಳಲಿದ್ದಾರೆ. ಹಾಪ್ಕಾಮ್ಸ್ ಆವರಣದಲ್ಲಿ ಎರಡನೇ ಬಾರಿ ಮಾವು ಮತ್ತು ಹಲಸು ಮೇಳ ನಡೆಯಲಿದೆ.
ಕಳೆದ ಬಾರಿ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆತಿತ್ತು. ಮಾವು ಮತ್ತು ಹಲಸನ್ನು ಗ್ರಾಹಕರಿಗೆ ಪರಿಚಯಿಸುವುದು, ಉತ್ತಮ ಗುಣಮಟ್ಟದ ಮಾವು ಮತ್ತು ಹಲಸನ್ನು ಗ್ರಾಹಕರಿಗೆ ಕೊಳ್ಳಲು ಅವಕಾಶ ಮಾಡುವುದು ಪ್ರಮುಖ ಉದ್ದೇಶವಾಗಿದೆ. ವಿವಿಧ ಜಿಲ್ಲೆಗಳಿಂದ ಆಗಮಿಸುವ ಮಾವು ಮತ್ತು ಹಲಸು ಬೆಳೆಗಾರರಿಗೂ ನಷ್ಟವಾಗದೆ, ಗ್ರಾಹಕರಿಗೂ ಹೊರೆಯಾಗದೆ ಮಾವು ಮತ್ತು ಹಲಸು ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರದ ಹಾಪ್ಕಾಮ್ಸ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಾಪ್ ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಮಾತನಾಡಿ ಕಳೆದ ಬಾರಿ ಮಾವು ಮೇಳ ಸಂದರ್ಭ ೧೫ ಮಳಿಗೆ ತೆರೆಯಲಾಗಿತ್ತು. ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಕೊಡಗು ಜಿಲ್ಲೆಯಲ್ಲಿನ ಮಾವು ಮತ್ತು ಹಲಸು ಇತರೆ ಹಣ್ಣುಗಳನ್ನು ಪರಿಚಯಿಸಲಾಗುತ್ತಿದ್ದು, ಗ್ರಾಹಕರಿಗೆ ಇದೊಂದು ಸುವರ್ಣ ಅವಕಾಶ. ನೈಸರ್ಗಿಕವಾಗಿ ಹಣ್ಣು ಮಾಡಿದ ಹಲಸು ಮತ್ತು ಮಾವನ್ನು ಕೊಳ್ಳಬಹುದಾಗಿದೆ. ಗ್ರಾಹಕರು ಮತ್ತು ಬೆಳೆಗಾರರ ನಡುವೆ ಹಾಪ್ಕಾಮ್ಸ್ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ನಾಯಕ್ ಮಾತನಾಡಿ ವಿವಿಧ ರೀತಿಯ ೧೫ ರಿಂದ ೨೦ ಮಾವಿನ ತಳಿಗಳನ್ನು ಪರಿಚಯಿಸುವ ಹಾಗೂ ಮಾರಾಟ ಮಾಡುವ ಉದ್ದೇಶದಿಂದ ಮಾವು ಮೇಳ ಆಯೋಜಿಸಲಾಗಿದೆ. ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಗಿಡಗಳ ಮಾರಾಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಒಟ್ಟು ೨೦ ರಿಂದ ೨೫ ಮಳಿಗೆಗಳನ್ನು ತೆರೆಯಲಾಗುವುದು ಎಂದರು.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್, ಸಹಾಯಕ ನಿರ್ದೇಶಕ ಬಿ.ಎಸ್.ಮುತ್ತಪ್ಪ ಇತರರು ಇದ್ದರು.
ಸುದ್ದಿಗೋಷ್ಠಿ ನಂತರ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹಾಪ್ಕಾಮ್ಸ್ ಜಾಗವನ್ನು ಪರಿಶೀಲಿಸಿದರು. ಬಿದ್ದಾಟಂಡ ರಮೇಶ್ ಚಂಗಪ್ಪ ಇತರರು ಇದ್ದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮುಂಗಾರು ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯಲ್ಲಿ ಸನ್ನದ್ಧವಾಗಿದೆ ಎಂದು ತಿಳಿಸಿದರು. ಮುಂದಿನ ತಿಂಗಳು ಎನ್ಡಿಆರ್ಎಫ್ ತಂಡ ಜಿಲ್ಲೆಗೆ ಆಗಮಿಸಲಿದೆ. ಆ ಸಂದರ್ಭದಲ್ಲಿ ಆಯ್ದ ಸ್ಥಳದಲ್ಲಿ ಅಣಕು ಪ್ರದರ್ಶನ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.