ಉಡುಪಿ: ಮಣಿಪಾಲದ ಪೈ ಕುಟುಂಬದ ಹಿರಿಯ, ವಿವಿಧ ಸಂಘ ಸಂಸ್ಥೆಗಳಿಗೆ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾದರು.
ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಇತ್ತೀಚೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಾಳೆ ಬೆಳಗ್ಗೆ 9ರಿಂದ 11 ಗಂಟೆವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇವರು ತಮ್ಮಂದಿರಾದ ಡಾ.ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್.ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ, ಸಹೋದರ ಟಿ.ಸತೀಶ್ ಯು.ಪೈ ಅವರನ್ನು ಅಗಲಿದ್ದಾರೆ.
ಆಧುನಿಕ ಮಣಿಪಾಲದ ಶಿಲ್ಪಿ ಡಾ.ಟಿ.ಎಂ.ಎ ಪೈ ಪ್ರತಿಷ್ಠಾನ, ಡಾ.ಟಿ.ಎಂ.ಎ ಪೈಯವರು ಸ್ಥಾಪಿಸಿದ ಮೊದಲ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟ್, ಸಿಂಡಿಕೇಟ್ ಬ್ಯಾಂಕ್ನ ಪೂರ್ವ ರೂಪ ಐಸಿಡಿಎಸ್ ಲಿ, ಉದಯವಾಣಿಯನ್ನು ನಡೆಸುತ್ತಿರುವ ಮಣಿಪಾಲ ಮೀಡಿಯ ನೆಟ್ವರ್ಕ್ ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹಲವು ಸಂಸ್ಥೆಗಳ ಬೆಳವಣಿಗೆಗೆ ಕಾರಣರಾದವರು.
1933 ಜೂ.20ರಂದು ಜನಿಸಿದ ಮೋಹನದಾಸ್ ಪೈಯವರು ಡಾ.ಟಿ.ಎಂ.ಎ ಪೈಯವರ ಹಿರಿಯ ಪುತ್ರ. ತಂದೆ ಆರಂಭಿಸಿದ ಮಣಿಪಾಲ ಅಕಾಡೆಮಿ ಶಾಲೆ, ಉಡುಪಿಯ ಮಾಡರ್ನ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಉಡುಪಿ ಬೋರ್ಡ್ ಹೈಸ್ಕೂಲ್ನಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆದರು. ಬಳಿಕ ತಂದೆ ಆರಂಭಿಸಿದ ಎಂಜಿಎಂ ಕಾಲೇಜಿನಲ್ಲಿ(1949-51) ಇಂಟರ್ಮೀಡಿಯೆಟ್ ಶಿಕ್ಷಣ ಪಡೆದರು. ಎಂಜಿಎಂ ಕಾಲೇಜಿನ ಮೊದಲ ತಂಡದ ವಿದ್ಯಾರ್ಥಿಯಾಗಿದ್ದ ಇವರು ಕೊಲ್ಹಾಾಪುರದಲ್ಲಿ ಕಾನೂನು ಶಿಕ್ಷಣ ಪಡೆದರು. ಪುಣೆ ವಿ.ವಿ.ಯಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದರು.
ಗೌರವ: ಕರ್ನಾಟಕ ಪತ್ರಿಕಾ ಅಕಾಡೆಮಿ ಪತ್ರಿಕಾರಂಗದ ಕ್ಷೇತ್ರಕ್ಕಾಗಿ ಸಲ್ಲಿಸಿದ ಕೊಡುಗೆಗಾಗಿ ಮಣಿಪಾಲ್ ಪ್ರಿಂಟರ್ಸ್ ಆ್ಯಂಡ್ ಪಬ್ಲಿಷರ್ಸ್ ಲಿ.ಗೆ ಕೊಡಮಾಡಿದ ಪ್ರಶಸ್ತಿಯನ್ನು ಮೋಹನದಾಸ್ ಪೈ ಸ್ವೀಕರಿಸಿದ್ದರು. ಇಂಡಿಯನ್ ನ್ಯೂಸ್ಪೇಪರ್ ಸೊಸೈಟಿಯ(ಐಎನ್ಎಸ್) ಕಾರ್ಯನಿರ್ವಾಹಕ ಸಮಿತಿಯ ಸದಸ್ಯರಾಗಿ ಎರಡು ಅವಧಿ ಸೇವೆ ಸಲ್ಲಿಸಿದ್ದರು. ಐಸಿಡಿಎಸ್ನ ಜಂಟಿ ಆಡಳಿತ ನಿರ್ದೇಶಕರಾಗಿ 1989ರಲ್ಲಿ ನೇಮಕಗೊಂಡ ಪೈಯವರು 1995ರಲ್ಲಿ ಆಡಳಿತ ನಿರ್ದೇಶಕರಾದರು. ಬಳಿಕ ಚೇರ್ಮನ್ ಮತ್ತು ಆಜೀವ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಎಂಜಿಎಂ ಕಾಲೇಜು ಟ್ರಸ್ಟ್ ಅಧ್ಯಕ್ಷರಾಗಿ ಇದೇ ವೇಳೆ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಪ್ರಾದೇಶಿಕ ಜಾನಪದ ರಂಗಕಲೆಗಳ ಸಂಶೋಧನ ಕೇಂದ್ರ, ಎಂಜಿಎಂ ಯಕ್ಷಗಾನ ಕೇಂದ್ರದ ಅಧ್ಯಕ್ಷರಾಗಿಯೂ ಈ ಸಂಸ್ಥೆೆಗಳ ಅಭಿವೃದ್ಧಿಗೆ ಅಪಾರ ಕೊಡುಗೆ ಸಲ್ಲಿಸಿದ್ದಾರೆ.
ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಸಾವು!?; ಯುವಕನ ಸಾವಿನ ತನಿಖೆಗೆ ಆದೇಶಿಸಿದ ಸರ್ಕಾರ..
ಪ್ರೇಮಿಯೇ ಪ್ರೇಯಸಿಯ ರುಂಡ ಕಡಿದ ಪ್ರಕರಣ; ಕೊಲೆಗೆ ಸಹಕರಿಸಿದ್ದ ತಂದೆ, ಮದ್ವೆ ಮಾಡಿಸಿದ್ದ ತಾಯಿಯ ಬಂಧನ..