More

    ವಲಸೆ ಯಾಕ್ರೀ, ಇದೇ ಉದ್ಯೋಗ ಖಾತ್ರಿ

    ಲಕ್ಷ್ಮೇಶ್ವರ: ಗ್ರಾಮೀಣ ಪ್ರದೇಶದ ಜನರು ವಲಸೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿ ಅವರಿಗೆ ನಿರಂತರ ಕೆಲಸ ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ‘ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ’ ಅಭಿಯಾನ ಜಾರಿಗೆ ತಂದಿದ್ದು, ತಾಲೂಕಿನ ಎಲ್ಲ 14 ಪಂಚಾಯಿತಿಗಳಲ್ಲಿ ಈ ಯೋಜನೆ ಯಶಸ್ವಿಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಗ್ರಾಮೀಣ ಭಾಗದ ಅನೇಕ ಕುಟುಂಬಗಳು ಜೀವನ ನಿರ್ವಹಣೆಗಾಗಿ ವಲಸೆ ಹೋಗುವುದು ಹೆಚ್ಚಾಗಿ ಕಾಣಬಹುಗಿದೆ. ಇದನ್ನು ಮನಗೊಂಡ ಗ್ರಾಮೀಣಾಭಿವೃದ್ಧಿ ಇಲಾಖೆ ಗುಳೆ ಹೋಗುವುದನ್ನು ತಡೆಯಲು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಮಾರ್ಚ್ 15ರಿಂದ ಜೂನ್ 15ರವರೆಗೆ (3 ತಿಂಗಳ ಕಾಲ) ಸ್ಥಳೀಯವಾಗಿ ಉದ್ಯೋಗ ಒದಗಿಸುವುದು. ಯೋಜನೆಯಿಂದ ಹೊರಗುಳಿದ ದುರ್ಬಲ ಕುಟುಂಬಗಳನ್ನು ಸಂಕ್ರಿಯವಾಗಿ ಭಾಗವಹಿಸುವಂತೆ ಮಾಡುವುದು. ಜತೆಗೆ ಗ್ರಾಮೀಣ ಜನರ ಸ್ವಾವಲಂಬಿ ಬದುಕಿಗೆ ಆಸರೆಯಾಗಲು ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ/ ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ.

    ಪ್ರಾರಂಭದಲ್ಲಿ ಒಂದು ವಾರ ಗ್ರಾಮ ಪಂಚಾಯಿತಿಗಳ ಮಟ್ಟದದಲ್ಲಿ ಜಾಗೃತಿ ಕಾರ್ಯಕ್ರಮ ಜರುಗಿಸಲಾಗಿದೆ. ನಂತರ ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಕೆ, ತಾಂತ್ರಿಕ ಮತ್ತು ಆಡಳಿತಾತ್ಮಕ ಮಂಜೂರಾತಿ ಪಡೆಯುವುದು. ಕಾಮಗಾರಿ ಆರಂಭ ಪೂರ್ವ ಮಾಹಿತಿ ಸಿದ್ಧತೆ ಮಾಡಿಕೊಳ್ಳುವುದು. ನಂತರ ಅದನ್ನು ಸಾರ್ವಜನಿಕರ ಮಾಹಿತಿಗಾಗಿ ನೋಟಿಸ್ ಬೋರ್ಡ್‌ಗೆ ಅಳವಡಿಕೆ ಮಾಡುವುದು. ಕೂಲಿಕಾರರ ಗುಂಪು ರಚಿಸಿ ಮೇಟ್‌ಗಳನ್ನು ಗುರುತಿಸಿ ತರಬೇತಿ ನೀಡುವ ಕಾರ್ಯವನ್ನು ಪಂಚಾಯತಿಗಳ ಹಂತಗಳಲ್ಲಿ ಮಾಡಲಾಗಿದೆ. ಏಪ್ರಿಲ್ 1 ರಿಂದಲೇ ಎನ್‌ಎಂಆರ್ ಗಳನ್ನು ಸೃಜನೆ ಮಾಡಿ ಕಾಮಗಾರಿ ಆರಂಭಿಸಲಾಗಿದೆ. ಬಿಎಫ್‌ಟಿ, ಗ್ರಾಮ ಕಾಯಕ ಮಿತ್ರರು,  ತಾಂಡಾ ರೋಜಗಾರ್ ಮತ್ತು ಕಾಯಕ ಬಂಧುಗಳು (ಮೇಟ್) ತಮ್ಮ ಪಂಚಾಯತಿ ವ್ಯಾಪ್ತಿಯಲ್ಲಿ ಮನೆ- ಮನೆಗೆ ಭೇಟಿ ನೀಡಿ ನಮೂನೆ-6ರಲ್ಲಿ ಕೆಲಸಕ್ಕಾಗಿ ಬೇಡಿಕೆ ಪಡೆಯುತ್ತಿದ್ದಾರೆ. ಜೊತೆಗೆ ಪಂಚಾಯತಿಯಲ್ಲಿಯ ಕಸ ವಿಲೇವಾರಿ ವಾಹನದ ಮೂಲಕ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಳಕ್ಕೆ ಪ್ರತಿ ಎನ್‌ಎಂಆರ್ ಗಳಲ್ಲಿ ಶೇ. 60ರಷ್ಟು ಮಹಿಳೆಯರು ಸೇರಿಸುವಂತೆ ತಿಳಿಸಲಾಗಿದೆ. ಗ್ರಾಮೀಣ ಜನರು ತಮ್ಮ ಜಮೀನುಗಳಲ್ಲಿ ತಮ್ಮದೇ ಕುಟುಂಬ ಸದಸ್ಯರು ಕೂಡಿಕೊಂಡು ಕೆಲಸ ಮಾಡಿ ಹಣ ಪಡೆಯಬಹದಾಗಿದೆ. 

    ಎನ್‌ಎಂಎಂಎಸ್ ಆ್ಯಪ್‌ನಲ್ಲಿ ಹಾಜರಾತಿ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಕೆಲಸಕ್ಕೆ ಬರುವ ಕೂಲಿಕಾರರ ಹಾಜರಾತಿ ಪಡೆಯಲು ಎನ್‌ಎಂಎಂಎಸ್ (ನ್ಯಾಷನಲ್ ಮೊಬೈಲ್ ಮಾನಿಟರಿಂಗ್ ಸರ್ವಿಸ್) ತಂತ್ರಾಂಶ ಅಭಿವೃದ್ಧಿ ಪಡಿಸಿದೆ. ಈಗಾಗಲೇ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿರ್ವಾಹಣೆ ಮಾಡುವವರಿಗೆ  ತಂತ್ರಾಂಶ ಬಳಕೆ ಕುರಿತು ತಿಳಿವಳಿಕೆ ನೀಡಲಾಗಿದೆ. 

    ಮಣ್ಣು ನೀರು ಸಂರಕ್ಷಣೆ: ರೈತರು ತಮ್ಮ ಜಮೀನಿನಲ್ಲಿ ಬದು ನಿರ್ಮಾಣ ಮಾಡಿಕೊಳ್ಳುವುದರಿಂದ ಅಂತರ್ಜಲ ಪ್ರಮಾಣ ಹೆಚ್ಚಾಗಲಿದೆ. ಬದು ನಿರ್ಮಾಣ ಮಾಡಿಕೊಳ್ಳವುದರಿಂದ ಮಣ್ಣು ಕೊಚ್ಚಿ ಹೋಗದೆ ಗುಂಡಿಗಳಲ್ಲಿಯೇ ಸಂಗ್ರಹವಾಗಲಿದೆ. ಮಳೆಗಾಲದಲ್ಲಿ ಹೆಚ್ಚು ಮಳೆಯಾದಾಗ ನೀರು ಹರಿದು ಕೊಚ್ಚಿ ಹೋಗದಂತೆ ಬದುವಿನಲ್ಲಿ ಮಣ್ಣಿನ ಏರಿ ಹಾಕುವುದರಿಂದ ಮಣ್ಣು ಮತ್ತು ನೀರನ್ನು ತಡೆ ಹಿಡಿದ ಭೂ ಫಲವತ್ತತೆ ಹಾಗೂ ಅಂತರ್ಜಲ ಹೆಚ್ಚಿಸಿಕೊಂಡು ಉತ್ತಮ ಇಳುವರಿಯನ್ನು ರೈತರು ಪಡೆಯ ಬಹುದಾಗಿದೆ.

    ನೀರು ಸಂಗ್ರಹ ಸಾಮರ್ಥ್ಯ: ಬದು ನಿರ್ಮಾಣ ಕಾಮಗಾರಿಯಲ್ಲಿ ಮೂರು ಮಾದರಿಗಳಿವೆ. 10 ಅಡಿ ಉದ್ದ, 10 ಅಡಿ ಅಗಲ, 1 ಅಡಿ ಆಳ. 10 ಅಡಿ ಉದ್ದ, 5 ಅಡಿ ಅಗಲ, 2 ಅಡಿ ಆಳ ಮತ್ತು 20 ಅಡಿ ಉದ್ದ, 5 ಅಡಿ ಅಗಲ 1 ಅಡಿ ಆಳದ ಕಂದಕಗಳಿಗೆ ಅವಕಾಶವಿದೆ. ಇದರಿಂದ ಪ್ರತಿ ಕಂದಕವೂ 2700 ಲೀಟರ್ ನೀರು ಹಿಡಿದಿಡುವ ಸಾಮರ್ಥ್ಯ ಹೊಂದಿರುತ್ತದೆ. ಪ್ರತಿ ಎಕರೆ ಪ್ರದೇಶದಲ್ಲಿ 16 ಕಂದಕಗಳು ನಿರ್ಮಾಣವಾಗಲಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts