ಮಾನ್ವಿ: ಸರ್ಕಾರ ರೈತರ ಅನುಕೂಲಕ್ಕಾಗಿ ಕಂದಾಯ ಇಲಾಖೆಯ ದಾಖಲೆಗಳನ್ನು ಮನೆಗೆ ತಲುಪಿಸುತ್ತಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತ ಹೇಳಿದರು.
ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಶನಿವಾರ ಕಂದಾಯ ಇಲಾಖೆಯ ವಿವಿಧ ಪ್ರಮಾಣ ಪತ್ರಗಳ ಕಿಟ್ಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು. ರಾಜ್ಯ ಸರ್ಕಾರ ರೈತರಿಗೆ ಅಗತ್ಯವಿರುವ ಕಂದಾಯ ದಾಖಲೆಗಳಾದ ಪಹಣಿ, ಅಟ್ಲಾಸ್, ಜಾತಿ ಮತ್ತು ಅದಾಯ ಪ್ರಮಾಣ ಪತ್ರ ಸೇರಿದಂತೆ ಹಲವು ಪ್ರಮಾಣ ಪತ್ರಗಳನ್ನು ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸುತ್ತಿದೆ. ತಾಲೂಕಿನ ಪ್ರತಿ ಗ್ರಾಮಕ್ಕೆ ಉಪ ತಹಸೀಲ್ದಾರ್, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ರೈತರ ಮನೆ ಬಾಗಿಲಿಗೆ ಬಂದು ಪ್ರಮಾಣಪತ್ರ ತಲುಪಿಸಲಿದ್ದಾರೆ. ಇದರಿಂದಾಗಿ ಇನ್ನು ಮುಂದೆ ರೈತರು ತಹಸಿಲ್ ಕಚೇರಿಗೆ ಅಲೆದಾಡುವುದು ತಪ್ಪಲಿದೆ ಎಂದು ತಿಳಿಸಿದರು.