ಮಾನ್ವಿ: ತುಂಗಭದ್ರಾ ಎಡದಂಡೆ ನಾಲೆ ಮೂಲಕ ಬೇಸಿಗೆ ಬೆಳೆಗೆ ಸಮರ್ಪಕವಾಗಿ ನೀರು ಬಿಡದಿರುವುದರಿಂದ ಬೆಳೆಗಳು ಬಾಡುತ್ತಿವೆ. ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸಿ ನಾಲೆಯ ಕೊನೆಯ ಭಾಗಕ್ಕೆ ನೀರು ಹರಸಬೇಕು ಎಂದು ಮಾಜಿ ಶಾಸಕ ಎನ್.ಎಸ್.ಬೋಸರಾಜು ಆಗ್ರಹಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಎರಡನೇ ಬೆಳೆಗಳಿಗೆ ನೀರು ಹರಿಸುವ ದೃಷ್ಟಿಯಿಂದ ತುಂಗಭದ್ರಾ ಎಡದಂಡೆ ನಾಲೆಗೆ ನಿತ್ಯ 3500 ಕ್ಯೂಸೆಕ್ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಸಭೆಯ ನಿರ್ಧಾರದಂತೆ ನೀರು ಬಿಡುತ್ತಿಲ್ಲ. ಸಿಂಧನೂರು ಹಾಗೂ ವಡ್ಡರಟ್ಟಿ ಭಾಗದಲ್ಲಿ ಅಕ್ರಮ ಪಂಪ್ಸೆಟ್ಗಳ ಬಳಕೆಯಿಂದಾಗಿ ನಾಲೆಯ ಕೊನೆಯ ಭಾಗಕ್ಕೆ ನೀರು ಬರುತ್ತಿಲ್ಲ ಎಂದು ದೂರಿದರು.
ಮಸ್ಕಿ, ಮಾನ್ವಿ, ಸಿರವಾರ ಹಾಗೂ ರಾಯಚೂರು ಭಾಗದ ರೈತರು, ರೈತ ಸಂಘಟನೆಗಳು, ವಿರೋಧ ಪಕ್ಷದವರು, ನೀರಿನ ಸಮಸ್ಯೆ ಬಗ್ಗೆ ಸರ್ಕಾರದ ಗಮನಕ್ಕೆ ತಂದರೂ ಪರಿಹಾರ ಸಿಕ್ಕಿಲ್ಲ. ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಬಿಸಿಲು ಹೆಚ್ಚುತ್ತಿರುವುದರಿಂದ ಬೆಳೆಗಳಿಗೆ ಹೆಚ್ಚುವರಿ ನೀರು ಬೇಕಾಗುತ್ತದೆ. ಆದರೆ, ನಾಲೆಯಲ್ಲಿ 500 ಕ್ಯೂಸೆಕ್ ನೀರು ಕಡಿಮೆ ಮಾಡಿದ್ದು, ಕೊನೆಯ ಭಾಗಕ್ಕೆ ತಲುಪುತ್ತಿಲ್ಲ. ಹೀಗಾಗಿ ಏ.10ರವರೆಗೆ 4 ಸಾವಿರ ಕ್ಯೂಸೆಕ್ ಹರಿಸಬೇಕು. ಭದ್ರಾ ಜಲಾಶಯದಿಂದ 2 ಟಿಎಂಸಿ ಬದಲಿಗೆ ಹೆಚ್ಚುವರಿ ನೀರು ಪಡೆಯಬೇಕು ಎಂದು ಆಗ್ರಹಿಸಿದರು.