ಬೆಂಗಳೂರು: ಶಿಕ್ಷಣದಲ್ಲಿ ಹಿಜಾಬ್ ವಿವಾದ, ವ್ಯಾಪಾರದಲ್ಲಿ ಧರ್ಮ ಸಂಘರ್ಷಗಳ ನಡುವೆಯೇ ಮತ್ತೊಂದು ವಿವಾದ ಉಂಟಾಗುವ ಲಕ್ಷಣಗಳು ಗೋಚರಿಸಲಾರಂಭಿಸಿವೆ. ರಾಜ್ಯದಲ್ಲಿ ಹತ್ತು ಮುಸ್ಲಿಂ ಕಾಲೇಜುಗಳು ತಲೆ ಎತ್ತಲಿದ್ದು, ಈಗಾಗಲೇ ತಯಾರಿಗಳು ಆರಂಭವಾಗಿವೆ. ಮತ್ತೊಂದೆಡೆ ಇದಕ್ಕೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕದ ಕೆಲವೆಡೆ ಕಾಲೇಜು ಆರಂಭಿಸಲು ಬೇಡಿಕೆ ಬಂದಿದ್ದು, ವಕ್ಫ್ ಬೋರ್ಡ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆ ಮೇರೆಗೆ ಸರ್ಕಾರ ಮುಸ್ಲಿಂ ಕಾಲೇಜು ನಿರ್ಮಾಣಕ್ಕೆ ಮುಂದಾಗಿದೆ ಎನ್ನಲಾಗಿದೆ.
ಅದರಲ್ಲೂ ದಕ್ಷಿಣಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನ 16 ಎಕರೆ ಜಾಗದಲ್ಲಿ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆಗೆ ಜಾಗವನ್ನೂ ಗುರುತು ಮಾಡಲಾಗಿದೆ ಎಂದೂ ಹೇಳಲಾಗಿದೆ. ರಾಜ್ಯಾದ್ಯಂತ ಇರುವ ವಕ್ಫ್ ಆಸ್ತಿಯಲ್ಲೇ ಈ ಕಾಲೇಜುಗಳು ತಲೆ ಎತ್ತಲಿದ್ದು, 2024-25ನೇ ಸಾಲಿನಿಂದ ಕಾಲೇಜುಗಳು ಕಾರ್ಯಾರಂಭವಾಗುವ ನಿರೀಕ್ಷೆ ಇದೆ. ಆರಂಭದಲ್ಲಿ ಪ್ರಥಮ ಪಿಯುಸಿ ಮಾತ್ರ ಇರಲಿದ್ದು, ನಂತರದ ವರ್ಷಗಳಲ್ಲಿ ದ್ವಿತೀಯ ಪಿಯುಸಿಯಿಂದ ಪದವಿ ಹಂತದವರೆಗೂ ವಿಸ್ತರಣೆ ಮಾಡುವ ಗುರಿ ಇರಿಸಿಕೊಳ್ಳಲಾಗಿದೆ.
ಹಿಜಾಬ್ ವಿವಾದದ ಬಳಿಕ ರಾಜ್ಯಾದ್ಯಂತ ಸುಮಾರು ಏಳೆಂಟು ಸಾವಿರ ಮುಸ್ಲಿಂ ವಿದ್ಯಾರ್ಥಿನಿಯರು ಒಂದೋ ಶಿಕ್ಷಣದಿಂದಲೇ ವಿಮುಖರಾಗಿದ್ದಾರೆ ಇಲ್ಲವೇ ಮುಸ್ಲಿಂ ಆಡಳಿತದ ಕಾಲೇಜುಗಳಿಗೆ ಹಾಗೂ ಹಿಜಾಬ್ಗೆ ಅವಕಾಶವಿರುವ ಖಾಸಗಿ ಕಾಲೇಜುಗಳಿಗೆ ಸೇರ್ಪಡೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಬೆಳವಣಿಗೆ ನಂತರ ದಕ್ಷಿಣಕನ್ನಡ ಜಿಲ್ಲೆಯೊಂದರಲ್ಲಿಯೇ ಮುಸ್ಲಿಂ ಶಿಕ್ಷಣ ಸಂಸ್ಥೆಗಳಿಂದ ಕಾಲೇಜು ಸ್ಥಾಪನೆಗೆ 13 ಅರ್ಜಿಗಳು ಸಲ್ಲಿಕೆ ಆಗಿವೆ. ಇದರಲ್ಲಿ ಎರಡು ಕಾಲೇಜುಗಳು ಈಗಾಗಲೇ ಮಂಜೂರಾಗಿವೆ. ಮುಂದಿನ ವರ್ಷ ಇನ್ನಷ್ಟು ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ದೊರೆಯುವ ಸಾಧ್ಯತೆ ಇದೆ.
ನಿಮ್ಮ ದಾಖಲೆಗಳನ್ನು ನೀಡಿ ಬೇರೆ ಯಾರೋ ಸಿಮ್ ಪಡೆದಿರಬಹುದು!; ಚೆಕ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ..