ಮಂಗಳೂರು: ಮೂಡುಶೆಡ್ಡೆಯಲ್ಲಿ ಶುದ್ಧೀಕರಣಗೊಳಿಸದ ಕೈಗಾರಿಕೆಗಳ ಕಲುಷಿತ ನೀರು ಮರವೂರು ಡ್ಯಾಂಗೆ ನೇರವಾಗಿ ಬಿಡುತ್ತಿರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಂಡ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಅವರ ಮುಖ್ಯ ಕಾರ್ಯದರ್ಶಿ ಮನಪಾ ಆಯುಕ್ತರಿಗೆ ಸೂಚಿಸಿದ್ದಾರೆ.
ಕಲುಷಿತ ನೀರು ಬಿಡುತ್ತಿರುವುದರಿಂದ 12 ಹಳ್ಳಿಗಳ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗಿದೆ. ಕೂಡಲೇ ಕಲುಷಿತ ನೀರಿನ ಹರಿವು ನಿಲ್ಲಿಸಿ, ಶುದ್ಧ ಕುಡಿಯುವ ನೀರು ಪೂರೈಸಿ ಕ್ರಮ ಕೈಗೊಳ್ಳುವಂತೆ ಮಾನವ ಹಕ್ಕು ಆಯೋಗದಲ್ಲಿ ಪ್ರಕರಣ ದಾಖಲಿಸಿದ್ದರೂ, ಪಾಲಿಕೆ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಪಾಲಿಕೆ ಅಧಿಕಾರಿ ಹಾಗೂ ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಅಧ್ಯಕ್ಷ ಆರ್.ಈಶ್ವರರಾಜ್ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದರು.
ಈ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತರಿಗೆ ತನಿಖೆ ನಡೆಸಿ, ವರದಿ ನೀಡಲು ಆದೇಶಿಸಿದ್ದಾರೆ. ಮರವೂರು ಡ್ಯಾಂಗೆ ಕಲುಷಿತ ನೀರು ಸೇರುತ್ತಿರುವ ಬಗ್ಗೆ ವಿಜಯವಾಣಿ ಕಳೆದ ವರ್ಷ ವರದಿ ಮಾಡಿತ್ತು. ಆ ಸಂದರ್ಭ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದ್ದು ಬಿಟ್ಟರೆ ಯಾವುದೇ ಪರಿಹಾರ ಕ್ರಮ ಕೈಗೊಂಡಿಲ್ಲ.