ಮಸ್ಕಿ: ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಸಮರ್ಪಕ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಮಸ್ಕಿ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ತಹಸಿಲ್ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್ ವಿಜಯಕುಮಾರ್ ಸಜ್ಜನ್ಗೆ ಮನವಿ ಸಲ್ಲಿಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ ಮಾತನಾಡಿ, ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದೆ. ಇದರಿಂದಾಗಿ ರೈತರು ಕಂಗಾಲು ಆಗಿದ್ದಾರೆ. ತುಂಗಭದ್ರಾ ಅಚ್ಚುಕಟ್ಟು ನಾಲೆಗಳಿಗೂ ನೀರು ತಲುಪಿಲ್ಲ. ನೀರಾವರಿ ಇಲಾಖೆ ಅಧಿಕಾರಿಗಳು ಗೇಜ್ ನಿರ್ವಹಣೆ ಮಾಡದಿರುವುದು ಇದಕ್ಕೆ ಕಾರಣ. ಇದರಿಂದಾಗಿ ಬೆಳೆಗಳು ಒಣಗುತ್ತಿವೆ.
ತಾಲೂಕಿನಲ್ಲಿ ಮಾರಲದಿನ್ನಿ ನೀರಾವರಿ ಯೋಜನೆ ಇದ್ದರೂ, ಜಲಾಶಯದಲ್ಲಿ ನೀರಿನ ಸಂಗ್ರಹ ತೀರಾ ಕೆಳ ಮಟ್ಟದಲ್ಲಿ ಇರುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ದೂರಿದರು.