ಮಸ್ಕಿ: ಅಂಗನವಾಡಿ ನೌಕರರ ಬೇಡಿಕೆಗಳ ಈಡೇರಿಕೆ ಬಗ್ಗೆ ಶಾಸಕರು ಸೆ.13 ರಿಂದ ನಡೆಯಲಿರುವ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ತಾಲೂಕು ಘಟಕ ಒತ್ತಾಯಿಸಿದೆ.
ಶಾಸಕ ಆರ್.ಬಸನಗೌಡ ಅವರ ಸರ್ಕಾರಿ ಆಪ್ತ ಕಾರ್ಯದರ್ಶಿ ಶರಣೇಗೌಡ ಹಂದ್ರಾಳ್ಗೆ ಬುಧವಾರ ಮನವಿ ಸಲ್ಲಿಸಿತು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಶೇಕ್ಷಾಖಾದ್ರಿ ಮಾತನಾಡಿ, ಒಂದು ವರ್ಷದಿಂದ ಬಿಟ್ಟೂ ಬಿಡದಂತೆ ಕಾಡುತ್ತಿರುವ ಕೊರೊನಾ ವಿರುದ್ಧ ಜೀವದ ಹಂಗು ತೊರೆದು ಸೇನಾನಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಪ್ರತಿ ಮನೆಗಳಿಗೆ ಭೇಟಿ ನೀಡಿ ಎಲ್ಲ ಮಾಹಿತಿ ಸಂಗ್ರಹ ಮಾಡಿ ಸರ್ಕಾರ ಹಾಗೂ ಸಂಬಂಧ ಪಟ್ಟ ಇಲಾಖೆಗೆ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. 1.50 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ ಸೋಂಕು ತಗುಲಿದ್ದು, 59 ಅಂಗನವಾಡಿ ಸಹಾಯಕಿಯರು ಮೃತಪಟ್ಟಿದ್ದಾರೆ. ಆದರೆ, ಸರ್ಕಾರ ಅವರಿಗೆ ಇದುವರೆಗೂ ನಯಾ ಪೈಸೆ ಪರಿಹಾರ ನೀಡಿಲ್ಲ ಎಂದು ಮನವಿಯಲ್ಲಿ ಬೇಸರ ವ್ಯಕ್ತಪಡಿಸಲಾಗಿದೆ.