ಮಸ್ಕಿ: ರೈತರನ್ನು ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಲು ಕೇಂದ್ರ ಸರ್ಕಾರ ಕೃಷಿ ಕಾಯ್ದೆಗೆ ತಿದ್ದುಪಡಿ ತಂದಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದನಗೌಡ ಪಾಟೀಲ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ರೈತ ಮೋರ್ಚಾ ಸೇರಿ ವಿವಿಧ ಮೋರ್ಚಾಗಳ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದರು. ಕೇಂದ್ರ ಸರ್ಕಾರ ರೈತರ ಹಿತ ಕಾಪಾಡಲು ಹೊಸ ಕಾಯ್ದೆ ಜಾರಿಗೆ ತಂದಿದೆ. ಇದನ್ನು ವಿರೋಧಿಸುವವರು ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ, ದಲಿತರು ಮತ್ತು ರೈತರ ಬಗ್ಗೆ ಅತೀವ ಕಾಳಜಿ ಹೊಂದಿದ್ದಾರೆ. ಅದಕ್ಕಾಗಿ ರೈತರ ಹಿತ ಕಾಪಾಡಲು ಹೊಸ ನೀತಿ ಜಾರಿಗೆ ತಂದಿದ್ದಾರೆ. ಮುಂದಿನ ದಿನಗಳಲ್ಲಿ ರೈತರು ಸರ್ಕಾರಿ ನೌಕರರಂತೆ ಹಣ ಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ರೆಡ್ಡಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಮರೇಶ, ಬಿಜೆಪಿ ಮುಖಂಡ ಪ್ರಸನ್ನ ಪಾಟೀಲ, ಎಸ್ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಣ್ಣ ನಾಯಕ, ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಶಬ್ಬೀರ ಚೌದ್ರಿ, ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಪ್ರಧಾನ ಕಾರ್ಯದರ್ಶಿ ಶರಣಯ್ಯ ಸೊಪ್ಪಿಮಠ, ಮಸ್ಕಿ ಮಂಡಲ ರೈತ ಮೋರ್ಚಾ ಅಧ್ಯಕ್ಷ ಜಿ.ವೆಂಕಟೇಶ್ವರ ರಾವ್ ಮತ್ತಿತರರಿದ್ದರು.