ಹಾಸನ: ಬೀದಿ ಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಹೇಳಿದರು.
ಬೇಲೂರು ಪುರಸಭೆ ಹಾಗೂ ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಬುಧವಾರ ಪುರಸಭೆಯ ವೇಲಾಪುರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೀದಿ ಬದಿ ವ್ಯಾಪಾರಿಗಳು ಗ್ರಾಹಕರಿಗೆ ಗುಣಮಟ್ಟದ ಪದಾರ್ಥಗಳನ್ನು ನೀಡಬೇಕು. ಅಲ್ಲದೆ, ತಾವು ವ್ಯಾಪಾರ ಮಾಡುವ ಸ್ಥಳಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕಸವನ್ನು ಪುರಸಭೆ ಆಟೋ ಟಿಪ್ಪರ್ಗಳಲ್ಲೇ ಹಾಕಬೇಕು. ಬೇಲೂರು ಪ್ರವಾಸಿ ತಾಣವಾಗಿರುವುದರಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಹಾಗಾಗಿ, ಸ್ವಚ್ಛತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಬೀದಿ ಬದಿ ವ್ಯಾಪಾರಿಗಳು ರಸ್ತೆಯಲ್ಲಿ ನಿಂತು ವ್ಯಾಪಾರ ಮಾಡುವುದರಿಂದ ವಾಹನಗಳ ದಟ್ಟಣೆ ಉಂಟಾಗುತ್ತಿದೆ. ಆದ್ದರಿಂದ ಸಾಧ್ಯವಾದಷ್ಟು ಯಾರಿಗೂ ತೊಂದರೆಯಾಗದಂತೆ ಸರ್ಕಾರದ ಸೌಲಭ್ಯಗಳ ಬಳಸಿಕೊಂಡು ಬದುಕು ಕಟ್ಟಿಕೊಳ್ಳಬೇಕು. ಅಲ್ಲದೆ, ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು ಎಂದು ಸಲಹೆ ನೀಡಿದರು.
ಹಾಸನ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ.ರವಿಕಾಂತ್ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡಲು ಇರುವ ಕಾನೂನುಗಳ ಬಗ್ಗೆ ಅರಿತುಕೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು. ವ್ಯಾಪಾರ ಮಾಡುವ ಸ್ಥಳಗಳಲ್ಲಿ ಯಾವುದೇ ಶೆಡ್ ನಿರ್ಮಾಣ ಮಾಡಬಾರದು. ಅಲ್ಲದೆ, ಇಲಾಖೆಯ ಷರತ್ತುಗಳನ್ನು ಉಲ್ಲಂಘಿಸಬಾರದು. ಒಂದು ವೇಳೆ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ವ್ಯಾಪಾರಿಯ ಪರವಾನಗಿಯನ್ನು ರದ್ದುಗೊಳಿಸಬಹುದು. ಅಲ್ಲದೆ, ಅವರಿಗೆ ದಂಡವನ್ನೂ ವಿಧಿಸಬಹುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವ್ಯವಸ್ಥಾಪಕ ಡಾ.ರಾಜಶೇಖರ್, ಪುರಸಭೆ ಮುಖ್ಯಾಧಿಕಾರಿ ಸುಜಯ್ ಕುಮಾರ್ ಇತರರಿದ್ದರು.