More

    ಎಲ್ಲರ ಶ್ರಮದಿಂದ ಸಂಘಟನೆ ಬಲಗೊಳ್ಳಲಿ

    ಕುಶಾಲನಗರ: ಕೊಡಗು ಜಿಲ್ಲೆಯ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ವತಿಯಿಂದ ಆರನೇ ವರ್ಷದ ರಾಷ್ಟ್ರೀಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಭಾನುವಾರ ಕುಶಾಲನಗರದ ಕಾರು ನಿಲ್ದಾಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

    ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಉದ್ಘಾಟಿಸಿ ಮಾತನಾಡಿ, ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಸ್ಪಂದಿಸಬೇಕು. ಬೀದಿಬದಿ ವ್ಯಾಪಾರಿಗಳ ಸಂಘಟನೆಯ ಬಲವರ್ಧನೆಗೆ ಎಲ್ಲರೂ ಶ್ರಮಿಸಬೇಕು ಎಂದರು.

    ಮುಖ್ಯ ಅತಿಥಿಗಳಾಗಿದ್ದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಸರ್ಕಾರ ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳಿಗೆ ಸದಾ ಸ್ವಂದಿಸಲಿದೆ. ಅಲ್ಲದೆ ಸ್ಥಳೀಯ ಆಡಳಿತ ಮಂಡಳಿಗಳ ವತಿಯಿಂದ ಅನುದಾನ ಮೀಸಲಿಡಲು ಸೂಚಿಸುತ್ತೇನೆ. ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳನ್ನು ಪರಿಹರಿಸಲು ಎಲ್ಲರೂ ಪಕ್ಷಾತೀತವಾಗಿ, ಧರ್ಮಾತೀತವಾಗಿ ಸಂಘಟಿತರಾಗಬೇಕು. ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ ಹಾಗೂ ಸಮಸ್ಯೆಗಳಿಗೆ ಸ್ಪಂದಿಸಲು ಸದಾ ಇರಲಿದ್ದೇನೆ ಎಂದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಸಿ.ಇ.ರಂಗಸ್ವಾಮಿ, ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟವು ರಾಜ್ಯದ ಎಲ್ಲಾ ಬೀದಿ ವ್ಯಾಪಾರಿಗಳ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಿಕೊಡುವಲ್ಲಿ ಸತತವಾಗಿ ಶ್ರಮಿಸುತ್ತಾ ಬಂದಿದೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಡಬೇಕು ಎಂದು ಒತ್ತಾಯಿಸಿದರು.

    ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಕೆ.ಸುಧೀರ್ ನಾರಾಯಣ್ ಮಾತನಾಡಿ, ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರಗಳ ಯೋಜನೆಗಳ ಬಗ್ಗೆ ವಿವರಿಸಿ, ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕೆ ಬ್ಯಾಂಕ್ ಸದಾ ನಿಮ್ಮೊಂದಿಗೆ ಇರುತ್ತದೆ ಎಂದರು. ನಂತರ ಪುರಸಭೆ ಸದಸ್ಯ ಅಮೃತ್ ರಾಜ್, ಮಾಜಿ ಸೈನಿಕ ಆಮೆ ಜನಾರ್ಧನ್, ಉಮಾಶಂಕರ್ ಮಾತನಾಡಿದರು. ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಆದಂ ವೇದಿಕೆಯಲ್ಲಿರುವ ಗಣ್ಯರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಜಗದೀಶ್ ವಹಿಸಿದ್ದರು.

    ಸಂಘಟನೆ ಜಿಲ್ಲಾಧ್ಯಕ್ಷರಾದ ಜಗದೀಶ್, ಮಾಜಿ ಸೈನಿಕ ಆಮೆ ಜನಾರ್ಧನ್, ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕಿ ರಾಜಶ್ರೀ ರಾಮಚಂದ್ರನ್, ದೈಹಿಕ ಶಿಕ್ಷಣ ಶಿಕ್ಷಕ ಉತ್ತಪ್ಪ, ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಕೆ.ಸುಧೀರ್ ನಾರಾಯಣ್, ಹಿರಿಯ ಎಂಜಿನಿಯರ್ ಸೈಜನ್ ಕೆ.ಪೀಟರ್, ಗ್ರಾಪಂ ಸದಸ್ಯ ಕೆ.ಬಿ.ಶಂಶುದ್ದೀನ್, ಕುಶಾಲನಗರ ಪುರಸಭೆ ಸಂಪನ್ಮೂಲ ವ್ಯಕ್ತಿಗಳಾದ ಶೃತಿ, ದಾಕ್ಷಾಯಿಣಿ, ನಂಜುಂಡ, ಸರಿಗಮಪ ವಿಜೇತೆ ಪ್ರಗತಿ ಬಡಿಗೇರ್, ಸಂಘಟನೆಯ ಮಹಿಳಾ ಜಿಲ್ಲಾಧ್ಯಕ್ಷೆ ಸೆಲಿನ ಡಿ.ಕುನ್ನ ಹಾಗೂ ಇನ್ನಿತರ ಸಾಧಕರನ್ನು ಸನ್ಮಾನಿಸಲಾಯಿತು. ಸಂಘಟನೆ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್, ಕುಶಾಲನಗರ ಪುರಸಭೆ ಸದಸ್ಯ ವಿ.ಎಸ್.ಆನಂದ್ ಕುಮಾರ್, ಆಟೋ ಮಾಲೀಕರ ಸಂಘದ ಅಧ್ಯಕ್ಷ ಕೃಷ್ಣ ದರ್ಶನ್, ಕಾರು ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಉದಯ್ ಕುಮಾರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts