More

    ಇನ್ನಷ್ಟು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

    ಯಾದಗಿರಿ: ಕರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಸೂಚಿಸಿದ್ದಾರೆ.

    ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ವೀಡಿಯೊ ಕಾನ್ಫ್ರೆನ್ಸ್ನಲ್ಲಿ ಬುಧವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬೀದರ್ ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳೊಂದಿಗೆ ಹಮ್ಮಿಕೊಂಡ ವೀಡಿಯೊ ಸಂವಾದದಲ್ಲಿ ಮಾತನಾಡಿದ ಅವರು, ವೈರಸ್ ಹರಡುವಿಕೆ ತಡೆಯಲ್ಲಿ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಹಾಗಾಗಿ, ಸರ್ಕಾರದ ಆದೇಶದಂತೆ ಸಾರ್ವಜನಿಕರಲ್ಲಿ ವೈರಸ್ ಹರಡುವಿಕೆ ವಿಧಾನ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಸಭೆ- ಸಮಾರಂಭಗಳಲ್ಲಿ ಹೆಚ್ಚಿನ ಜನರು ಸೇರದಿರುವಂತೆ ಮನವಿ ಮಾಡಿ. ಜನರಿಗೆ ನಿಖರ ಮಾಹಿತಿ ನೀಡುವ ಮೂಲಕ ವದಂತಿಗಳಿಗೆ ತೆರೆ ಎಳೆಯಬೇಕು. ಖಾಸಗಿ ಆಸ್ಪತ್ರೆಗಳ ಮಾಹಿತಿ ಸಂಗ್ರಹಿಸುವ ಜತಗೆ ರೋಗಲಕ್ಷಣಗಳಿರುವ ವ್ಯಕ್ತಿಗಳು ದಾಖಲಾದಲ್ಲಿ ಮಾಹಿತಿ ನೀಡಲು ಸೂಚಿಸಿ. ಚೆಕ್ಪೋಸ್ಟ್ಗಳಲ್ಲಿ ಸ್ಕ್ರೀನಿಂಗ್ ಮಾಡಲು ನಿರ್ದೇಶಿಸಿದರು.

    ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಮಾತನಾಡಿ, ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿರುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಯಾದಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 15, ಶಹಾಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 2 ಹಾಗೂ ಸುರಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ಸೇರಿದಂತೆ ಒಟ್ಟು 27 ಐಸೊಲೇಷನ್ ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
    ಜಿಲ್ಲೆಯಲ್ಲಿ ಇದುವರೆಗೆ ಯಾದಗಿರಿ ತಾಲೂಕಿನಲ್ಲಿ 9, ಶಹಾಪೂರ ತಾಲೂಕಿನಲ್ಲಿ 13 ಹಾಗೂ ಸುರಪುರ ತಾಲೂಕಿನಲ್ಲಿ 16 ಸೇರಿದಂತೆ ಒಟ್ಟು 38 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ.

    ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ಮುಂಜಾಗ್ರತಾ ಕ್ರಮವಾಗಿ ಇವರನ್ನು 14 ದಿನಗಳ ಕಾಲ ಅವರ ಮನೆಯಲ್ಲಿ ಪ್ರತ್ಯೇಕವಾಗಿರಲು ತಿಳಿಸಿದ್ದು, ದಿನಕ್ಕೆ 2 ಬಾರಿ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸಲಿದೆ. ಅಲ್ಲದೇ, ಇವರ ಕುಟುಂಬದ ಸದಸ್ಯರ ಮೇಲೆಯೂ ಕೂಡಾ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.

    ಯಾದಗಿರಿ ನಗರದ ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯ, ಹೊಸ ಬಸ್ ನಿಲ್ದಾಣ ಹಾಗೂ ಯರಗೋಳ, ಇಟಗಾಲ್ ಕ್ರಾಸ್, ಮುಡಬೂಳ ಗ್ರಾಮಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ, ಸ್ಕ್ರೀನಿಂಗ್ ಮಾಡಲು ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಹೆಚ್ಚಿನ ಜನರು ಸೇರುವ ಸಭೆ-ಸಮಾರಂಭಗಳನ್ನು ನಿಷೇಧಿಸಲಾಗಿದೆ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಗಶಿಳಿಗೆ ವಿವರಿಸಿದರು.

    ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕೊರೋನಾ ವೈರಸ್ ಬಗ್ಗೆ ಡಂಗೂರ ಸಾರಬೇಕು. ದೊಡ್ಡ ಸಭೆ- ಸಮಾರಂಭಗಳಿಗೆ ಭಾಗವಹಿಸಬಾರದು. ಜ್ವರ, ಉಸಿರಾಟದ ತೊಂದರೆ, ನೆಗಡಿ, ಕೆಮ್ಮು ರೋಗಲಕ್ಷಣಗಳು ಕಂಡುಬಂದಲ್ಲಿ 24/7 ಉಚಿತ ಆರೋಗ್ಯ ಸಹಾಯವಾಣಿ 104 ಅಥವಾ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ 08473-253950 ಕರೆ ಮಾಡಿ. ವೈಯಕ್ತಿಕವಾಗಿ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕರು ಆಗಾಗ್ಗೆ ಕೈತೊಳೆದುಕೊಳ್ಳಬೇಕು ಎಂಬ ಅಂಶಗಳ ಡಂಗೂರ ಸಾರುವಂತೆ ಸೂಚಿಸಿದರು.

    ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಸಂಖ್ಯೆ, ಅವುಗಳಲ್ಲಿನ ಸೌಕರ್ಯ ಮತ್ತು ವೈದ್ಯಕೀಯ ಸಲಕರಣೆಗಳ ಮಾಹಿತಿ, ವೈದ್ಯರು ಹಾಗೂ ಶುಶ್ರೂಷಕರ ವಿವರವಾದ ಮಾಹಿತಿ ಪಡೆಯುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿವೇಕಾನಂದ ಟೆಂಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಬಿ.ಪಾಟೀಲ್ಗೆ ತಿಳಿಸಿದರು.

    ಹೆಚ್ಚುವರಿ ಬೆಡ್, ಕಾಟ್ಗಳು, ವೆಂಟಿಲೇಟರ್ ಹಾಗೂ ವೈಯಕ್ತಿಕ ಸಂರಕ್ಷಣೆ ಸಲಕರಣೆಗಳನ್ನು ಖರೀದಿಸುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪಗೆ ನಿರ್ದೇಶಿಸಿದರು. ಜಿಪಂ ಸಿಇಒ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts