ಮಂಡ್ಯ: ಶೋಷಿತ ಸಮುದಾಯಗಳ ಒಗ್ಗಟ್ಟಿನ ರಾಜಕೀಯ ಹೋರಾಟದ ಫಲವಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಸಾಮಾಜಿಕ ನ್ಯಾಯ ಮತ್ತು ಸಮಾನತಾವಾದದ ಗಟ್ಟಿ ಧ್ವನಿಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಬೇಕು ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಗುರುಪ್ರಸಾದ್ ಕೆರಗೋಡು ಆಗ್ರಹಿಸಿದರು.
ನಗರದ ಕನಕಭವನದ ಆವರಣದಲ್ಲಿ ಆಯೋಜಿಸಿದ್ದ ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಮುಖಂಡರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಶೋಷಿತ ಸಮುದಾಯಗಳು ಕೋಮವಾದಿ ಬಿಜೆಪಿಯನ್ನು ದೂರವಿಡುವ ಉದ್ದೇಶದಿಂದ ಒಗ್ಗಟ್ಟಾಗಿ ಕಾಂಗ್ರೆಸ್ ಬೆಂಬಲಿಸಿದರು. ಇದರ ಫಲವಾಗಿ ಪಕ್ಷ ಅಧಿಕಾರಕ್ಕೆ ಬಂದಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆ ಆಗಬೇಕಾಗಿದೆ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಹಾಗೂ ಎಲ್ಲ ಸಮುದಾಯದ ಬಡವರಿಗೆ ರಕ್ಷಣೆ ಸಿಗಬೇಕಾದರೆ ಸಮಾನತಾವಾದದ ಗಟ್ಟಿ ಧ್ವನಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ನಾಯಕತ್ವ ಅನಿವಾರ್ಯವಾಗಿದೆ ಎಂದು ಪ್ರತಿಪಾದಿಸಿದರು.
ಜಿಲ್ಲಾ ಕುರುಬರ ಸಂಘದ ಮಾಜಿ ಅಧ್ಯಕ್ಷ ಕೆ.ಎಚ್.ನಾಗರಾಜು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಮುಖಂಡರಾದ ಬಿ.ಲಿಂಗಯ್ಯ, ಅಮ್ಜದ್ಪಾಷ, ಎಂ.ಕೃಷ್ಣ, ಎನ್.ದೊಡ್ಡಯ್ಯ, ಎಚ್.ಪಿ.ಸತೀಶ್, ಹುಚ್ಚೇಗೌಡ, ಎಂ.ಎಸ್.ರಾಜಣ್ಣ ಇತರರಿದ್ದರು.