ಬೆಳಗಾವಿ: ಕಳೆದ ಎರಡು ವಾರಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಹಾನಿಗೊಳಗಾದ ಬೆಳೆ ಹಾಗೂ ಮನೆಗಳನ್ನು ಕಂದಾಯ ಸಚಿವ ಆರ್.ಅಶೋಕ ಸೋಮವಾರ ಪರಿಶೀಲಿಸಿದರು.
ಹುಕ್ಕೇರಿ ತಾಲೂಕಿನ ಹತ್ತರಗಿ ಹಾಗೂ ಜಿನರಾಳ ಗ್ರಾಮಕ್ಕೆ ಆಗಮಿಸಿ ಬೆಳೆಹಾನಿಯನ್ನು ವೀಕ್ಷಿಸಿದರು. ನಂತರ ಹುಕ್ಕೇರಿ ಪಟ್ಟಣದಲ್ಲಿ ಮಳೆಯಿಂದ ಮನೆ ಹಾಗೂ ಇತರ ಮೂಲ ಸೌಕರ್ಯಗಳಿಗೆ ಉಂಟಾದ ಹಾನಿ ಪರಿಶೀಲಿಸಿದರು. ಬಳಿಕ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮಕ್ಕೆ ಭೇಟಿ ನೀಡಿ, ಕೃಷ್ಣಾ ನದಿ ಉಕ್ಕಿ ಹರಿದು ಉಂಟಾದ ಹಾನಿ ಕುರಿತು ಸ್ಥಳದಲ್ಲಿದ್ದ ರೈತರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಪಿ.ರಾಜೀವ್,
ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಉಮೇಶ ಕತ್ತಿ, ದುರ್ಯೋಧನ ಐಹೊಳೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಇತರರು ಇದ್ದರು.