ತುಮಕೂರು: ಡಿಸಿಸಿ ಬ್ಯಾಂಕ್ ಮೂಲಕ ಬಡವರ ಬಂಧು ಯೋಜನೆಯಡಿ ಸಣ್ಣ ವ್ಯಾಪಾರಿಗಳಿಗೆ ರಾಜ್ಯದೆಲ್ಲೆಡೆ ಸಾಲಸೌಲಭ್ಯ ಒದಗಿಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ನಗರದ ಕ್ಯಾತಸಂದ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಡಿಡಿಸಿ ಬ್ಯಾಂಕ್ ವತಿಯಿಂದ ಜಿಲ್ಲೆಯ ಶ್ರಮಿಕ ಅತಿ ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ನೆರವು ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಒಂದು ಕೋಟಿ ರೂ. ಸಾಲ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ, ಬೀದಿ ಬದಿ ವ್ಯಾಪಾರಿಗಳು ಖಾಸಗಿ ಅವರಿಂದ ಸಾಲ ಪಡೆದು ಹೆಚ್ಚು ಬಡ್ಡಿ ಕಟ್ಟುವುದನ್ನು ತಪ್ಪಿಸಲು ‘ಬಡವರ ಬಂಧು’ ಯೋಜನೆ ರೂಪಿಸಲಾಗಿದೆ ಎಂದರು. ಸಣ್ಣ ಮತ್ತು ಅತಿಸಣ್ಣ ವ್ಯಾಪಾರಿಗಳು ಹಾಗೂ ಮಹಿಳಾ ಸಂಘಗಳಿಗೆ ನೀಡುವ ಸಾಲ ಸೌಲಭ್ಯ ಮರುಪಾವತಿಯಾಗುತ್ತದೆ, ರಾಜ್ಯದಲ್ಲಿ ಎಷ್ಟೇ ಸಾಲ ನೀಡಿದರೂ ಅದು ಜನರಿಗೆ ಉಪಯೋಗವಾಗುತ್ತದೆ ಎಂದರು.
ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮಾತನಾಡಿ, ಸಹಕಾರಿ ಕ್ಷೇತ್ರದ ಲಾಭಾಂಶವನ್ನು ಕರೊನಾ ಸಂದರ್ಭದಲ್ಲಿ ಸಿಎಂ ಪರಿಹಾರ ನಿಧಿಗೆ ನೀಡಿದ ಸಹಕಾರ ಸಚಿವರು, ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನವನ್ನು ನೀಡುವ ಯೋಜನೆ ರೂಪಿಸಿರುವುದು ಮಾದರಿ ಎಂದರು.
ಕಾರ್ಯಕ್ರಮದಲ್ಲಿ 93 ಮಂದಿ ವ್ಯಾಪಾರಿಗಳಿಗೆ 9.30ಲಕ್ಷ ಸಾಲ ವಿತರಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವ ಬೈರತಿಬಸವರಾಜು,ರಾಜ್ಯ ಸಹಕಾರ ಯೂನಿಯನ್ ಅಧ್ಯಕ್ಷ ಗಂಗಣ್ಣ, ತುಮುಲ್ ಅಧ್ಯಕ್ಷ ಮಹಾಲಿಂಗಯ್ಯ, ಕ್ಯಾತ್ಸಂದ್ರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಲ್ಲಹಳ್ಳಿ ದೇವರಾಜು, ಕ್ರೀಪ್ಕೋ ಉಪಾಧ್ಯಕ್ಷ ಆರ್.ರಾಜೇಂದ್ರ ಮತ್ತಿತರರು ಇದ್ದರು.