ಕೂಡ್ಲಿಗಿ: ತಾಲೂಕಿನ ಕೆಲ ಗ್ರಾಮಗಳಲ್ಲಿ ಅನವಶ್ಯಕವಾಗಿ ನೀರು ಪೋಲು ಮಾಡಲಾಗುತ್ತಿದೆ. ಇದನ್ನು ತಡೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಸೂಚನೆ ನೀಡಿದರು.
ನೀರು ಪೋಲು ತಡೆಗಟ್ಟಿ
ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ಸಂಜೆ ಬರ ಪರಿಹಾರಕ್ಕೆ ಕೈಗೊಂಡ ಕ್ರಮಗಳ ಕುರಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮುಂಗಾರು ಮಳೆ ಸಮರ್ಪಕವಾಗಿಲ್ಲ. ಹಿಂಗಾರು ಮಳೆಯಾಗುವ ಲಕ್ಷಣವೂ ಕಾಣುತ್ತಿಲ್ಲ. ಹಾಗಾಗಿ ಕ್ಷೇತ್ರದಲ್ಲಿ ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ವಿಶೇಷವಾಗಿ ಜಾನುವಾರುಗಳಿಗೆ ಮೇವು, ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ತಾಲೂಕು ಆಡಳಿತ ಹಾಗೂ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಜಲ ಸಮಸ್ಯೆ ಪರಿಹರಿಸಲು ಸಹಾಯವಾಣಿ ಆರಂಭಿಸಬೇಕು. ಅಧಿಕಾರಿಗಳು ಸಾರ್ವಜನಿಕರ ಕರೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ನಿರ್ದೇಶನ ನೀಡಿದರು.
ಇದನ್ನೂ ಓದಿ: ‘ವಾರಕ್ಕೆ 70 ಗಂಟೆ ದುಡಿಯಬೇಕು…’ಎಂಬ ಇನ್ಫೋಸಿಸ್ ನಾರಾಯಣ ಮೂರ್ತಿಯವರ ಸಲಹೆಗೆ ಯುವಕರ ಪ್ರತಿಕ್ರಿಯೆ ಹೇಗಿದೆ ಗೊತ್ತಾ?
ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಲೋಹಿತ್ ಕುಮಾರ್ ಮಾತನಾಡಿ, ಮುಂದಿನ ಏಳು ವಾರಗಳಿಗೆ ಆಗುವಷ್ಟು ಮೇವಿದೆ. ಆದರೂ ಗಂಡಬೊಮ್ಮನಹಳ್ಳಿ ಹಾಗೂ ಪೂಜಾರಹಳ್ಳಿಯಲ್ಲಿ ಗೋಶಾಲೆ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಕೂಡ್ಲಿಗಿ ಭಾಗದಲ್ಲಿಯೂ ಒಂದು ಗೋಶಾಲೆ ತೆರೆಯಬೇಕು. ಅಲ್ಲದೆ ನೀರು ಇರುವ ಕೆರೆಯನ್ನು ಗುರುತಿಸಲು ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಆಲೂರು, ಗೊಲ್ಲರಹಟ್ಟಿ, ಪಿಚ್ಚಾರಹಟ್ಟಿ, ನಾಗರಹುಣಸೆ, ಬೆಳಕಟ್ಟೆ ಗೊಲ್ಲರಹಟ್ಟಿಗಳಲ್ಲಿ ನೀರಿನ ಸಮಸ್ಯೆ ಇದ್ದು, ಕೊಳವೆಬಾವಿಗಳನ್ನು ಕೊರೆಸಬೇಕಾಗಿದೆ ಎಂದು ಗ್ರಾಮೀಣ ಕುಡಿವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಎಇಇ ಪ್ರಸನ್ನ ಸಭೆಗೆ ಮಾಹಿತಿ ನೀಡಿದರು.
ತಹಸೀಲ್ದಾರ್ ಎಂ.ರೇಣುಕಾ, ತಾಪಂ ಇಒ ವೈ.ರವಿಕುಮಾರ್, ಜೆಸ್ಕಾಂ ಎಇಇ ಪ್ರಕಾಶ ಪತ್ತೇನೂರು, ಸಣ್ಣ ನೀರಾವರಿ ಇಲಾಖೆಯ ಎಇಇ ರಾಮಾಂಜನೇಯ, ಪಪಂ ಮುಖ್ಯಾಧಿಕಾರಿ ಫಿರೋಜ್ ಖಾನ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಾಣೇಶ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಟಿ. ಸುನೀಲ್ ಕುಮಾರ್ ಇದ್ದರು.