ಗೋಣಿಕೊಪ್ಪ: ವಿರಾಜಪೇಟೆ ಬಳಿಯ ಕಾವೇರಿ ಕಾಲೇಜು ಸಮೀಪ ನಿರ್ಮಾಣವಾಗುತ್ತಿರುವ ಚರಂಡಿ ಕಾಮಗಾರಿ, ಗೋಣಿಕೊಪ್ಪಲಿನಲ್ಲಿ 2ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣ ಕಾಮಗಾರಿ ಹಾಗೂ ಗೋಣಿಕೊಪ್ಪ ಕಾವೇರಿ ಹಿಲ್ಸ್ ಬಡಾವಣೆಯಲ್ಲಿ ಇತ್ತೀಚೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಸ್ಥಳಗಳಿಗೆ ಬುಧವಾರ ಶಾಸಕ ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಸ್ ನಿಲ್ದಾಣದ ಆವರಣದಲ್ಲಿ ತೆಗೆದಿರುವ ಬೃಹತ್ ಗುಂಡಿಗಳಿಂದ ಅಡಚಣೆ ಉಂಟಾಗುತ್ತಿದೆ ಎಂದು ಸಾರ್ವಜನಿಕರು ಶಾಸಕರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ ಪರಿಶೀಲನೆ ನಡೆಸಿದ ಶಾಸಕರು ಕೆಲಸ ಚುರುಕುಗೊಳಿಸುವಂತೆ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.
ಪ್ರಮುಖರಾದ ಪಿ.ಕೆ.ಪ್ರವೀಣ್, ಕುಲ್ಲಚಂಡ ಪ್ರಮೋದ್ ಗಣಪತಿ, ರಫಿಕ್, ಧನಲಕ್ಷ್ಮೀ ಇತರರು ಇದ್ದರು.