ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸಂಪಂಗಿರಾಮನಗರದ ನಿವಾಸಿ ಬಿ. ಲಕ್ಷ್ಮೀದೇವಿ ಎಂಬುವರು ಸಲ್ಲಿಸಿದ್ದ ಅರ್ಜಿಯ ಸಂಬಂಧ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಮಂಗಳವಾರ ಪ್ರಕಟಿಸಿತು.
ಏನಿದು ಪ್ರಕರಣ?:
ಪ್ರಜಾ ಪ್ರತಿನಿಧಿ ಕಾಯ್ದೆಯ ವಿವಿಧ ಸೆಕ್ಷನ್ಗಳ ಅನ್ವಯ ರಿಜ್ವಾನ್ ಅರ್ಷದ್ ಅಕ್ರಮ ಎಸಗಿದ್ದು, ಆಯ್ಕೆಯಾಗಲು ಅರ್ಹರಲ್ಲ. ಅವರನ್ನು 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ತಡೆಯಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಕಾಂಗ್ರೆಸ್ ಪ್ರಕಟಿಸಿರುವ ಗ್ಯಾರಂಟಿ ಯೋಜನೆಗಳು ಆಮಿಷ ಹಾಗೂ ಆಶ್ವಾಸನೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಅಭ್ಯರ್ಥಿಗಳ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿವೆ.
ಆ ಮೂಲಕ ರಿಜ್ವಾನ್ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಮತದಾರರಿಗೆ ಆಮಿಷವೊಡ್ಡುವುದು ಲಂಚ ಮತ್ತು ಭ್ರಷ್ಟಾಚಾರಕ್ಕೆ ಸಮವಾಗಿದೆ. ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿರುವುದು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಸಹ ಅಪರಾಧವಾಗಿದೆ ಎಂದು ದೂರಲಾಗಿತ್ತು.