Pahalgam Terror Attack : ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಮಾಡಿದ ಜಾನಪದ ಗಾಯಕಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

2019ರಲ್ಲಿ ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರು ಹುತಾತ್ಮಾರಾಗಿದ್ದನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ನರೇಂದ್ರ ಮೋದಿ ಮತಗಳನ್ನು ಗಳಿಸಿದ್ದರು. ಅದೇ ರೀತಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿ ಮೋದಿ ಅವರು ಬಿಹಾರದಲ್ಲಿ ಮತಗಳನ್ನು ಪಡೆಯಲಿದ್ದಾರೆ ಎಂದು ಲಖನೌ ಮೂಲದ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ವಿಡಿಯೋ ಮಾಡಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.
ನಾನು ಸರ್ಕಾರವನ್ನು ಏನು ಕೇಳಲಿ? ಭಾರತದಲ್ಲಿ ಶಿಕ್ಷಣ ಮತ್ತು ಆರೋಗ್ಯ ಇನ್ನು ಮುಂದೆ ಪ್ರಸ್ತುತವಲ್ಲ. ದೇಶದಲ್ಲಿ ಹಿಂದೂ-ಮುಸ್ಲಿಂ ಸಂಘರ್ಷ ಹೆಚ್ಚಾಗಿದೆ. ಅನೇಕ ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ನೇಹಾ ವೀಡಿಯೊದಲ್ಲಿ ಟೀಕಿಸಿದ್ದರು.
ಪಾಕಿಸ್ತಾನದ ಜಾಲತಾಣಗಳಲ್ಲಿ ಈ ವಿಡಿಯೋ ವ್ಯಾಪಕವಾಗಿ ಹರಿದಾಡಿದ ನಂತರ ನೇಹಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನೇಹಾ ನೀಡಿದ ರಾಷ್ಟ್ರವಿರೋಧಿ ಹೇಳಿಕೆಗಳನ್ನು ಪಾಕಿಸ್ತಾನಿ ಮಾಧ್ಯಮಗಳು ಭಾರತದ ವಿರುದ್ಧ ಬಳಸುತ್ತಿವೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಧರ್ಮದ ಆಧಾರದ ಮೇಲೆ ಸಮಾಜದಲ್ಲಿ ದ್ವೇಷವನ್ನು ಪ್ರಚೋದಿಸುವ ಉದ್ದೇಶವನ್ನು ನೇಹಾ ಅವರ ಟ್ವೀಟ್ ಹೊಂದಿದೆ ಎಂದು ಆರೋಪಿಸಿ ಅಭಯ್ ಪ್ರತಾಪ್ ಸಿಂಗ್ ಲಕ್ನೋದ ಹಜರತ್ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನೇಹಾಸಿಂಗ್ ರಾಥೋಡ್ ಮಾಡಿದ ಟ್ವೀಟ್ಗಳನ್ನು ಪರಿಶೀಲಿಸಿದ್ದಾರೆ. ಟ್ವೀಟ್ಗಳ ಆಧಾರದ ಮೇಲೆ, ಆಕೆಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಇವುಗಳಲ್ಲಿ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾರ್ವಜನಿಕ ಶಾಂತಿಗೆ ಭಂಗ ತರುವುದು ಮತ್ತು ದೇಶದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವುದು ಸೇರಿವೆ. ಇದಲ್ಲದೆ, ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಪಹಲ್ಗಾಮ್ ದುರಂತದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿದ್ದು, ಪಹಲ್ಗಾಮ್ ದಾಳಿಯ ಬಗ್ಗೆ ಅನುಚಿತ ಪೋಸ್ಟ್ಗಳನ್ನು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ. ದೇಶದ ಹಲವಾರು ರಾಜ್ಯಗಳ ನೆಟ್ಟಿಗರ ವಿರುದ್ಧ ಈಗಾಗಲೇ ಪ್ರಕರಣಗಳು ದಾಖಲಾಗಿವೆ. (ಏಜೆನ್ಸೀಸ್)
3267 ದಿನಗಳ ಬಳಿಕ ಅರ್ಧ ಶತಕ: ಈ ಅದ್ಭುತ ಆಟಕ್ಕೆ ಕಾರಣ ಯಾರು ಅಂತ ಹೇಳಿದ ಕೃನಾಲ್ ಪಾಂಡ್ಯ! Krunal Pandya