ಬೆಂಗಳೂರು: ಒಂದೇ ಕುಟುಂಬದ ಇಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮನೆಯಲ್ಲಿ ಇನ್ನೊಬ್ಬ ಮಹಿಳೆಯಿದ್ದು ಆಕೆಯೂ ಅಸ್ವಸ್ಥಳಾಗಿರುವುದಾಗಿ ತಿಳಿಸಲಾಗಿದೆ.
ಬೆಂಗಳೂರಿನ ಆರ್ ಆರ್ ನಗರ ಠಾಣಾ ವ್ಯಾಪ್ತಿಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಬೆಮೆಲ್ ಲೇಔಟ್ ನಿವಾಸಿಗಳಾದ ಹರೀಶ್(30) ಹಾಗೂ ಆತನ ತಾಯಿ ಆರ್ಯಂಬ ಮೃತರು. ಇವರ ಮನೆಯಲ್ಲಿ ಬಾಡಿಗೆಗಿದ್ದ ಪ್ರವೀಣ್ ಹೆಸರಿನ ವ್ಯಕ್ತಿ ಮನೆಯಲ್ಲಿ ಶವ ಇರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಮನೆಯೊಳಗೆ ಹರೀಶ್ನ ಅಕ್ಕ ಶ್ರೀಲಕ್ಷ್ಮೀ(47) ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಆರ್ ಆರ್ ನಗರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಯ ಹಿಂದಿನ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.