ಚೆನ್ನೈ: ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಗಳಲ್ಲಿ ಒಂದಾದ ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, 17ನೇ ಆವೃತ್ತಿ ಆರಂಭಕ್ಕೂ ಮುನ್ನ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯಶಸ್ವಿ ನಾಯಕರೆನ್ನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿ ನಾಯಕತ್ವವನ್ನು ಹಸ್ತಾಂತರಿಸಿದ್ದಾರೆ.
17ನೇ ಆವೃತ್ತಿ ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ಕಿಂಗ್ಸ್ ನಾಯಕತ್ವವನ್ನು ಮಹೇಂದ್ರ ಸಿಂಗ್ ಧೋನಿ ಹಸ್ತಾಂತರಿಸಿದ್ದು, ತಂಡದ ನೂತನ ನಾಯಕನನ್ನಾಗಿ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ರನ್ನು ನೇಮಿಸಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ: ಸಿಎಂ ಸಿದ್ದರಾಮಯ್ಯ
ಮಾರ್ಚ್ 22ರಂದು ಚೆಪಾಕ್ನಲ್ಲಿರುವ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸವಾಲನ್ನು ಎದುರಿಸಲಿದೆ. ಇದಕ್ಕೂ ಒಂದು ದಿನ ಮುಂಚಿತವಾಗಿ ನಾಯಕ ಸ್ಥಾನವನ್ನು ಮಹೇಂದ್ರ ಸಿಂಗ್ ಧೋನಿ ಋತುರಾಜ್ಗೆ ಹಸ್ತಾಂತರಿಸಿದ್ದು, ಹಲವರಲ್ಲಿ ಆಶ್ಚರ್ಯವನ್ನುಂಟು ಮಾಡಿದೆ.
ಕಳೆದ ಆವೃತ್ತಿಯಲ್ಲೇ ಮಂಡಿ ನೋವಿನೊಂದಿಗೆ ಇಡೀ ಲೀಗ್ ಆಡಿದ್ದ ಧೋನಿ ತಂಡವನ್ನು ದಾಖಲೆಯ ಐದನೇ ಬಾರಿಗೆ ಚಾಂಪಿಯನ್ ಮಾಡಿದ್ದರು. ಆ ವೇಳೆಯೆ ಧೋನಿ ಐಪಿಎಲ್ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಎಲ್ಲಾ ಊಹಪೋಹಗಳನ್ನು ಸುಳ್ಳು ಮಾಡಿದ್ದ ಧೋನಿ, ಮತ್ತೆ ಐಪಿಎಲ್ ಅಖಾಡಕ್ಕೆ ಕಾಲಿಟ್ಟಿದ್ದರು. 2020ರಲ್ಲಿ ಚೆನ್ನೈ ಪರ ಪದಾರ್ಪಣೆ ಮಾಡಿರುವ ಋತುರಾಜ್, ಒಟ್ಟು 52 ಪಂದ್ಯಗಳನ್ನು ಆಡಿದ್ದಾರೆ. ಒಂದು ಶತಕವನ್ನು ಗಳಿಸಿದ್ದಾರೆ.