ಶಿವಮೊಗ್ಗ: ಕೋಟ್ಯಂತರ ಜನರು ಕಾತುರದಿಂದ ಕಾಯುತ್ತಿದ್ದ ದಿನ ಇಂದು (ಜನವರಿ 22) ನೆರವೇರಿದ್ದು, ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ಸಂಪನ್ನಗೊಂಡಿದೆ. ದೇಶಾದ್ಯಂತ ಸಂಭ್ರಮ ಮನೆ ಮಾಡಿದ್ದು, ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಸಿಹಿ ಹಂಚಿ ಸಂಭ್ರಮಿಸಲಾಗಿದೆ. ಆದರೆ, ಮಹಿಳೆಯೊಬ್ಬರು ರಾಮನ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿ ಅಲ್ಲಾಹು ಅಕ್ಬರ್ ಕೂಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ರಾಜ್ಯದಾದ್ಯಂತ ಬಿಜೆಪಿ ನಾಯಕರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅದರಂತೆ ಶಿವಮೊಗ್ಗ ನಗರದಲ್ಲಿಯೂ ಸಿಹಿ ವಿತರಣೆ ಕಾರ್ಯಕ್ರಮ ನಡೆಯುತ್ತಿದ್ದಾಗ ಮುಸ್ಲಿಂ ಮಹಿಳೆ ಘೋಷಣೆ ಕೂಗಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ನೀವು ಮೋದಿ ಪರ ಕೆಲಸ ಮಾಡುತ್ತಿದ್ದೀರಿ ಎಂದು ಮಹಿಳೆ ಪೊಲೀಸರಿಗೆ ಅವಾಜ್ ಹಾಕಿದ್ದಾರೆ.
ಮಹಿಳೆ ಅಲ್ಲಾಹು ಅಕ್ಬರ್ ಎಂದು ಕೂಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಆಕೆಯನ್ನು ತಡೆಯಲು ಮುಂದಾಗಿದ್ದು, ನೀವು ಮೋದಿ ಪರ ಕೆಲಸ ಮಾಡುತ್ತಿದ್ದೀರಿ ಮಹಿಳೆ ಅವಾಜ್ ಹಾಕಿದ್ದಾರೆ. ಬಳಿಕ ಮುಸ್ಲಿಂ ಮಹಿಳೆಯನ್ನು ಬಂಧಿಸುವಂತೆ ಬಿಜೆಪಿ ನಾಯಕರು ಪೊಲೀಸರನ್ನು ಒತ್ತಾಯಿಸಿದರು. ಮುಸ್ಲಿಂ ಮಹಿಳೆ ಗೊಂದಲ ಸೃಷ್ಟಿಸುತ್ತಿದ್ದರೂ ಸುಮ್ಮನಿದ್ದೀರಾ ಎಂದು ಬಿಜೆಪಿ ಕಾರ್ಯಕರ್ತರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಮುಸ್ಲಿಂ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ: ಸಾನಿಯಾ-ಶೋಯೆಬ್ ವಿಚ್ಛೇದನ ಪಡೆದಿದ್ದಾರೆ; ವದಂತಿಗಳಿಗೆ ತೆರೆ ಎಳೆದ ಕುಟುಂಬಸ್ಥರು
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಬಂಧಿತ ಮಹಿಳೆಯ ಹಿನ್ನಲೆ ವಿಚಾರಿಸಿದಾಗ ಆಕೆ ಮಾನಸಿಕ ಅಸ್ವಸ್ಥೆ ಎಂದು ತಿಳಿದು ಬಂದಿದೆ. ಆಕೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಹಿಳೆ ತಂದೆಯಿಂದ ಪೊಲೀಸರಿಗೆ ದಾಖಲೆಗಳ ಸಲ್ಲಿಕೆ ಮಾಡಲಾಗಿದ್ದು, 2018 ರಿಂದ ಚಿಕಿತ್ಸೆ ಪಡೆಯುತ್ತಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಮಹಿಳೆಯ ತಂದೆ ಸಯ್ಯದ್ ಅಬ್ಬಾಸ್ ಮಾತನಾಡಿ, ನನ್ನ ಮಗಳು ಮೊದಲಿನಿಂದಲೂ ಸ್ವಲ್ಪ ಮಾನಸಿಕ ಅಸ್ವಸ್ಥಳಿದ್ದಾಳೆ. ಈ ಸಂಬಂಧ ಅವಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೇವೆ. ಕಳೆದ 10 ತಿಂಗಳಿನಿಂದ ಗಂಡನ ಮನೆ ಬಿಟ್ಟು ನನ್ನ ಮನೆಯಲ್ಲಿಯೇ ಇದ್ದಾಳೆ. ಘಟನೆ ಬಗ್ಗೆ ಕೇಳಿ ನನಗೂ ನೋವಾಗಿದೆ. ಅವಳು ಆ ತರಹದ ಹುಡುಗಿ ಅಲ್ಲ. ಅವಳು ಜಾತಿ ಭೇದ ಮಾಡಲ್ಲ. ಎಲ್ಲರನ್ನೂ ಒಂದೇ ತರ ನೋಡುತ್ತಾಳೆ. ಉದ್ದೇಶ ಪೂರಕವಾಗಿ ಅವಳು ಘೋಷಣೆ ಕೂಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.