ಮೈಸೂರು: ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ರೋಡ್ ಶೋ ನಡೆಸಿದ್ದರು. ಇದಕ್ಕೇ ಭಾರೀ ಜನ ಬೆಂಬಲವೂ ವ್ಯಕ್ತವಾಗಿತ್ತು. ಆದರೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಅಭೂತಪೂರ್ವ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಸಜ್ಜಾಗಿದೆ.
ಇದನ್ನೂ ಓದಿ: ನಾವು ಗೆಲ್ಲಲೆಂದೇ ಬಂದವರು… ನಮಗೆ ಸೋಲು ಕ್ಷಣಿಕ: ಬಿ.ಎಲ್.ಸಂತೋಷ್
ಸದ್ಯ ಕಾಂಗ್ರೆಸ್ ಮುಖಂಡರು ವಿರೋಧ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ವಿರುದ್ಧ ವ್ಯಂಗ್ಯ ನಡೆ ಅನುಸರಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ಮೈಸೂರಿನ ರಾಜ ಮಾರ್ಗದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದರು. ಇದೀಗ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿಕೊಂಡು ಈ ರಸ್ತೆಯನ್ನು ಸಗಣಿ ನೀರಿನಿಂದ ಸ್ವಚ್ಛಗೊಳಿಸಿದ್ದಾರೆ.
ಇದನ್ನೂ ಓದಿ: ಸಿಎಂ ಸ್ಥಾನ ಸಿಗದಿದ್ದರೆ ಸಚಿವ ಸ್ಥಾನವೂ ಬೇಡ: ಡಿಕೆಶಿ ಬಿಗಿ ಪಟ್ಟು, ಕಾಂಗ್ರೆಸ್ ಹೈಕಮಾಂಡ್ ಕಂಗಾಲು
ಅಂಬಾರಿ ಹಾದು ಹೋಗುವ ರಾಜ ಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದೆ ದೊಡ್ಡ ತಪ್ಪು. ಇದು ರಾಜ ಮನೆತನಕ್ಕೆ ಮಾಡಿದ ಅಪಮಾನ. ದಸರಾ ಸಂದರ್ಭದಲ್ಲಿ ಅಂಬಾರಿ ಬಿಟ್ಟರೆ ಇನ್ಯಾವುದೇ ದೊಡ್ಡ ಮೆರವಣಿಗೆ ಇಲ್ಲಿ ಮಾಡಿರಲಿಲ್ಲ. ಆದರೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿಯವರು ನಾಡಹಬ್ಬಕ್ಕೆ ಅಪಮಾನ ಆಗುವ ಹಾಗೇ ರೋಡ್ ಶೋ ಮಾಡಿದ್ದರಿಂದ ಮೈಸೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಸೋತಿದೆ. ಹೀಗಾಗಿ ಈ ರಸ್ತೆಯ ಕರ್ಮವನ್ನು ತೊಳೆಯುವುದಕ್ಕೆ ಸಗಣಿ ನೀರು ಬಳಸಿ ಸ್ವಚ್ಚ ಮಾಡುತ್ತಿದ್ದೇವೆ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡ ಕಂಸಾಳೆ ರವಿ ಹೇಳಿದ್ದಾರೆ.