ಬೆಂಗಳೂರು: ಇಂದು (ಫೆಬ್ರವರಿ 27) ನಡೆದ ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಗೆಲುವು ಸಾಧಿಸಿದ ಮೂವರು ಅಭ್ಯರ್ಥಿಗಳ ಪೈಕಿ ಕಾಂಗ್ರೆಸ್ನ ನಾಸೀರ್ ಹುಸೇನ್ ಬೆಂಬಲಿಗರು ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗುವ ಮೂಲಕ ಉದ್ಧಟತನ ಮೆರೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ನಮ್ಮ ಭಾರತದ ಸೌರ್ವಭೌಮತ್ವವನ್ನು ಧಿಕ್ಕರಿಸಿ ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ರಾಜ್ಯ ಸೇರಿ ದೇಶಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇಂಥದ್ದೊಂದು ಪಾಪಿ ಕೃತ್ಯ, ಅಕ್ಷಮ್ಯ ಅಪರಾಧವನ್ನು ವಿಧಾನಸೌಧದೊಳಗೆ ಮಾಡಿರುವುದು ಮತ್ತೊಂದು ದುರಂತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ನಾಸೀರ್ ಹುಸೇನ್ ನಿರಾಕರಿಸಿದ್ದು, ಪ್ರಶ್ನೆ ಮಾಡಿದ ಮಾಧ್ಯಮ ಸಿಬ್ಬಂದಿ ಮೇಲೆಯೇ ದರ್ಪ ತೋರಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ಇದನ್ನೂ ಓದಿ: ರಾಜ್ಯಸಭಾ ಚುನಾವಣೆ; ಕಾಂಗ್ರೆಸ್ಗೆ 3, ಬಿಜೆಪಿಗೆ 1 ಸ್ಥಾನದಲ್ಲಿ ಗೆಲುವು, ಜೆಡಿಎಸ್ಗೆ ಮುಖಭಂಗ
ಕಾಂಗ್ರೆಸ್ನ ಮೂವರು ಹಾಗೂ ಬಿಜೆಪಿಯ ಒಬ್ಬರು ಗೆಲುವು ಸಾಧಿಸಿದ್ದಾರೆ ಎಂದು ಅಧಿಕಾರಿಗಳು ಚುನಾವಣಾ ಫಲಿತಾಂಶವನ್ನು ಪ್ರಕಟಿಸಿದರು. ಈ ವೇಳೆ ನೂತನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ರನ್ನು ಅವರಿಗೆ ಬೆಂಬಲಿಗರು ಹಾರವನ್ನು ಹಾಕಿ ಸಂಭ್ರಮಿಸಿದ್ದಾರೆ. ಇದೇ ವೇಳೆ, ಕೆಲವರು “ಪಾಕಿಸ್ತಾನ್ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಾರೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರ ವಿರುದ್ಧ ಬಿಜೆಪಿ ದೂರು ನೀಡಲು ಮುಂದಾಗಿದೆ.
ಈ ವಿಡಿಯೋವನ್ನು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಿದ್ದಲ್ಲಿ ಮಾತ್ರ ನಾಸೀರ್ ಹುಸೇನ್ ಬೆಂಬಲಿಗರು ನಿಜವಾಗಿಯೂ ಪಾಕಿಸ್ತಾನ ಪರ ಘೋಷಣೆ ಹಾಕಿದ್ದಾರೆಯೆ ಅಥವಾ ಇಲ್ಲವೇ ಎಂಬುದರ ಸತ್ಯಾಸತ್ಯತೆ ಬಹಿರಂಗವಾಗಲಿದೆ.