More

    ಶಿಕ್ಷಕ ಯಾಕೂಬ್‌ಗೆ ರಾಷ್ಟ್ರಪ್ರಶಸ್ತಿ ಪ್ರದಾನ

    ಮಂಗಳೂರು/ಬೆಳ್ತಂಗಡಿ: ಸರ್ಕಾರಿ ಶಾಲೆಯಲ್ಲಿ ಗಣಿತ ಪ್ರಯೋಗಾಲಯ ಸ್ಥಾಪಿಸಿ ರಾಜ್ಯದಲ್ಲೇ ಮಾದರಿಯಾಗಿರುವ ಬೆಳ್ತಂಗಡಿ ತಾಲೂಕಿನ ನಡ ಸರ್ಕಾರಿ ಶಾಲೆಯ ಶಿಕ್ಷಕ ಯಾಕೂಬ್ ಕೊಯ್ಯೂರು ಅವರಿಗೆ ಶನಿವಾರ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
    ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ ವರ್ಚುವಲ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಕೇಂದ್ರ ಮಾನವ ಸಂಪನ್ಮೂಲ ಸಚಿವ ಡಾ.ರಮೇಶ್ ಪೊಕ್ರಿಯಾಲ್ ಉಪಸ್ಥಿತರಿದ್ದರು.

    ಮಂಗಳೂರಿನಲ್ಲಿ ದ.ಕ. ಜಿಲ್ಲಾ ಪಂಚಾಯಿತಿ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಯಾಕೂಬ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಷ್ಟ್ರಪತಿಗಳಿಗೆ ಗೌರವ ಸಲ್ಲಿಸಿದರು. ಯಾಕೂಬ್ ಅವರ ಸಾಧನೆಗಳ ಬಗ್ಗೆ ಕಿರುಚಿತ್ರವನ್ನು ಈ ಸಂದರ್ಭ ಪ್ರದರ್ಶಿಸಲಾಯಿತು. ರಾಷ್ಟ್ರಪತಿಗಳು ಚಪ್ಪಾಳೆ ತಟ್ಟುವ ಮೂಲಕ ಅಭಿನಂದಿಸಿದರು.
    ಬಳಿಕ ಕೇಂದ್ರ ಸರ್ಕಾರದ ಪರವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಯಾಕೂಬ್‌ರಿಗೆ ಪ್ರಶಸ್ತಿ ಪದಕ ಹಾಗೂ ಪ್ರಮಾಣಪತ್ರ ಹಸ್ತಾಂತರಿಸಿದರು. ಪ್ರಶಸ್ತಿಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಹೆಸರು ಬಂದಿದೆ. ಸಾಧನೆ ಮುಂದುವರಿಸಿ, ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್.ಸೆಲ್ವಮಣಿ, ಶಿಕ್ಷಣ ಇಲಾಖೆ ಉಪನಿರ್ದೇಶಕ ಮಲ್ಲೇಸ್ವಾಮಿ ಉಪಸ್ಥಿತರಿದ್ದರು.

    ರಾಜ್ಯದಲ್ಲೇ ಮೊದಲ ಬಾರಿಗೆ ಗಣಿತ ಪ್ರಯೋಗಾಲಯವನ್ನು ನಡ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಿ, ಗಣಿತವನ್ನು ಸುಲಭವಾಗಿ ಮಕ್ಕಳಿಗೆ ಕಲಿಸುವಲ್ಲಿ ಯಶಸ್ವಿಯಾಗಿರುವ ಯಾಕೂಬ್, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಬೋಧನೆ, ಪ್ರಯೋಗ, ವಿಡಿಯೋಗಳನ್ನು ಹಂಚಿದ್ದಾರೆ. ರಾಜ್ಯದಲ್ಲೇ ಮಾದರಿಯಾಗಿ ಈ ಗಣಿತ ಪ್ರಯೋಗಾಲಯ ಮೂಡಿಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts