ಸಾಗರ: ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾರದರ್ಶಕ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಆರ್.ಯತೀಶ್ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ನಾಗೋಡಿ ಚೆಕ್ಪೋಸ್ಟ್ಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ಪಾರದರ್ಶಕ ಚುನಾವಣೆ ನಡೆಸಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ತಿಳಿಸಿದರು.
ತಾಲೂಕಿನ ನಾಗೋಡಿ, ನಾಗವಳ್ಳಿ, ಚೂರಿಕಟ್ಟೆಯಲ್ಲಿ ಚೆಕ್ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಪ್ರತಿ ಚೆಕ್ಪೋಸ್ಟ್ನಲ್ಲಿ ಇಬ್ಬರು ಚುನಾವಣಾಧಿಕಾರಿಗಳು, ಓರ್ವ ಪೊಲೀಸ್, ಓರ್ವ ಗೃಹರಕ್ಷಕ ದಳದ ನೌಕರ ದಿನದ 24 ತಾಸು ತಪಾಸಣೆ ನಡೆಸುತ್ತಾರೆ. ಹೊರ ಊರಿನಿಂದ ತಾಲೂಕಿನೊಳಗೆ ಬರುವ ಎಲ್ಲ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ಮಾಡಲು ಸೂಚಿಸಲಾಗಿದೆ ಎಂದರು.
ಈಗಾಗಲೆ ಜಿಲ್ಲಾಧಿಕಾರಿಗಳು ಚೆಕ್ಪೋಸ್ಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಲ್ಲ ಚೆಕ್ಪೋಸ್ಟ್ಗಳಿಗೆ ಸಿ.ಸಿ. ಕ್ಯಾಮರಾ ಅಳವಡಿಸಲು ಸೂಚನೆ ನೀಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಹಣ, ಇತರೆ ವಸ್ತು, ಮದ್ಯ ಇನ್ನಿತರೆ ಸಾಗಾಣಿಕೆಗೆ ಅವಕಾಶ ಇರುವುದಿಲ್ಲ. ಅಂತಹದ್ದು ಕಂಡು ಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ತಹಸೀಲ್ದಾರ್ ಸೈಯದ್ ಕಲೀಂವುಲ್ಲಾ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.