ನವದೆಹಲಿ: ಕನಿಷ್ಠ ಬೆಂಬಲ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಕುಗ್ಗಿಲಸು ಮಾಡಲಾಗುತ್ತಿದೆ ಎಂದು ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ಹೇಳುವ ಮೂಲಕ ಹೊಸ ವಿವಾದ ಒಂದನ್ನು ಹುಟ್ಟುಹಾಕಿದ್ದಾರೆ.
ದಲ್ಲೆವಾಲ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇತ್ತ ಈ ಹೇಳಿಕೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದೆ.
ರಾಮಮಂದಿರದ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದನ್ನು ಕಡಿಮೆ ಮಾಡುವ ಸಮಯ ಈಗ ಬಂದಿದೆ. ಹೀಗಾಗಿ ನಾವು (ರೈತರು) ಪ್ರತಿಭಟನೆಗೆ ಇಳಿದಿದ್ದೇವೆ ಎಂದು ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ಹೇಳುವ ಮೂಲಕ ವಿವಾದವನ್ನು ಹುಟ್ಟು ಹಾಕಿದ್ದಾರೆ.
ಇದನ್ನೂ ಓದಿ: ಊರುಗೋಲಿನ ಸಹಾಯದಲ್ಲಿ ಹೃತಿಕ್ ರೋಷನ್; ಅಷ್ಟಕ್ಕೂ ಆಗಿದ್ದಾದರು ಏನು?
ಇತ್ತ ದಲ್ಲೆವಾಲ್ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇದು ಕಮೆಂಟ್ ಮಾಡುವುದಕ್ಕೆ ಸೂಕ್ತವಾದ ಸಮಯವಲ್ಲ. ಏಕೆಂದರೆ ಸರ್ಕಾರದ ವಿರುದ್ಧ ರೈತರನ್ನು ಯಾರೋ ಎತ್ತಿ ಕಟ್ಟುತ್ತಿದ್ದಾರೆ ಎಂಬುದು ಈಗ ಸ್ಪಷ್ಟವಾಗಿದೆ. ರೈತರನ್ನು ಪಂಜಾಬ್ ಸರ್ಕಾರ ತಡೆಯಬಹುದಿತ್ತು. ಆದರೆ, ಅವರು ಆ ಕೆಲಸ ಮಾಡಲಿಲ್ಲ.
ಇದೊಂದು ರಾಜಕೀಯ ಹೇಳಿಕೆಯಾಗಿದ್ದು, ಇಷ್ಟೊಂದು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದರೆ ಜನ ಪ್ರಧಾನಿ ಮೋದಿಗೆ ಬೆಂಬಲ ನೀಡುವುದನ್ನು ನಿಲ್ಲಿಸುತ್ತಾರೆಯೇ. ಈ ರೀತಿಯ ಹೇಳಿಕೆ ಜನರಿಗೆ ತಪ್ಪು ಸಂದೇಶ ರವಾನಿಸುತ್ತದೆ ಎಂದು ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ದಲ್ಲೆವಾಲ್ ಹೇಳಿಕೆಗೆ ಪ್ರತಿಕ್ರಿಯಿಸಿ ಕಿಡಿಕಾರಿದ್ದಾರೆ.
ಜಗಜೀತ್ ಸಿಂಗ್ ದಲ್ಲೆವಾಲ್ ಭಾರತಿ ಕಿಸಾನ್ ಯೂನಿಯನ್ (ಏಕ್ತಾ ಸಿಧುಪುರ್) ಸಂಘಟನೆಯನ್ನು ಮುನ್ನಡೆಸುತ್ತಿದ್ದು, ಹರಿಯಾಣ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಈ ಸಂಘಟನೆ ಸಕ್ರಿಯವಾಗಿ ಕೆಲಸ ಮಾಡಡುತ್ತಿದೆ. ದಲ್ಲೆವಾಲ್ ನೀಡಿರುವ ಹೇಳಿಕೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಯಾವ ಹಂತ ತಲುಪಲಿದೆ ಎಂದು ಕಾದು ನೋಡಬೇಕಿದೆ.