ಹೊಸದುರ್ಗ: ಸರ್ಕಾರಿ ಜೂನಿಯರ್ ಕಾಲೇಜಿನ ಅಭಿವೃದ್ಧಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ತಿಳಿಸಿದರು.
ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ನೂತನ ಹೆಚ್ಚುವರಿ ಕೊಠಡಿಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ವಿದ್ಯಾರ್ಥಿಗಳ ಹೆಚ್ಚಿನ ಸಾಧನೆಗೆ ಈಗ ಉತ್ತಮ ವಾತಾವರಣವಿದೆ. ಜೂನಿಯರ್ ಕಾಲೇಜಿನಲ್ಲಿ 1200 ಕ್ಕೂ ಹೆಚ್ಚಿನ ಮಕ್ಕಳು ಓದುತ್ತಿರುವುದು ಉತ್ತಮ ಶೈಕ್ಷಣಿಕ ವಾತಾವರಣಕ್ಕೆ ಸಾಕ್ಷಿಯಾಗಿದೆ ಎಂದರು.
ಪದವಿಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಇಲ್ಲಿ ಉತ್ತಮ ಸಾಧನೆ ಮಾಡಿದರೆ ಬದುಕನ್ನು ಚೆನ್ನಾಗಿ ರೂಪಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಪಾಲಕರು, ಶಿಕ್ಷಕರ ನಂಬಿಕೆ ಉಳಿಸಿಕೊಳ್ಳಬೇಕು. ಹೆಸರು ಗಳಿಸಬೇಕು ಎಂದರು.
ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ಬಾಬು ಮಾತನಾಡಿ, ಕರೊನಾ ಕಾರಣದಿಂದ ಶಾಲೆಗಳು ಸರಿಯಾಗಿ ನಡೆಯದಿದ್ದರೂ ಆನ್ಲೈನ್, ವಿದ್ಯಾಗಮ ಮತ್ತಿತರ ಕಾರ್ಯಕ್ರಮಗಳ ಮೂಲಕ ಶಿಕ್ಷಣ ಒದಗಿಸುವ ಪ್ರಯತ್ನ ಮಾಡಲಾಗಿದೆ. ಶಾಲೆಗಳು ಆರಂಭವಾಗಿದ್ದು, ಮಕ್ಕಳು ಹೆಚ್ಚಿನ ಸಮಯ ಅಭ್ಯಾಸದಲ್ಲಿ ತೊಡಗಿಸಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದರು.