ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವೇರುತ್ತಿದೆ. ಮಂಡ್ಯ ಕ್ಷೇತ್ರ ಬಿಸಿ ಬಿಸಿ ಚರ್ಚೆಯಲ್ಲಿದೆ. ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಸೀಟು ಹಂಚಿಕೆಗೆ ತುದಿಗಾಲಲ್ಲಿ ಕಾಯುತ್ತಿದೆ.
ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಲಿದ್ದು, ಭಾನುವಾರ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಅಮಿತ್ ಶಾ ಭೇಟಿ ಮಾಡಿ ಮಂಡ್ಯ ಟಿಕೆಟ್ ಹಾಗೂ ಇತರೆ ಸೀಟು ಹಂಚಿಕೆ ಬಗ್ಗೆ ಚರ್ಚಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಅಮಿತ್ ಶಾ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಬಿಜೆಪಿ ಮೈಸೂರು ಕ್ಲಸ್ಟರ್ ಸಭೆ ನಡೆಸಲಿರುವುದರಿಂದ ಕುಮಾರಸ್ವಾಮಿ ಭೇಟಿ ಮಾಡಿ ಚರ್ಚಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಅಮಿತ್ ಶಾ ಬಿಜೆಪಿ ನಾಯಕರ ಜತೆ ಮಾತ್ರ ಚರ್ಚಿಸಲಿರುವುದರಿಂದ ಕುಮಾರಸ್ವಾಮಿ ಮೈಸೂರಿನಲ್ಲಿ ಭೇಟಿಯಾಗುವ ಬದಲು ದೆಹಲಿಯಲ್ಲಿ ಭೇಟಿ ಮಾಡಿ ಸೀಟು ಹಂಚಿಕೆ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.