ಚಾಮರಾಜನಗರ: ಚಾಮರಾಜನಗರ ತಾಲೂಕಿನ ದಡದಹಳ್ಳಿಯಲ್ಲಿ ಮನೆಯ ಗೋಡೆ ಕುಸಿದು ಮೃತಪಟ್ಟ ಮೂರ್ತಿ ಅವರ ಮನೆಗೆ ಮಂಗಳವಾರ ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ (ಕಾಡಾ) ಅಧ್ಯಕ್ಷ ಜಿ. ನಿಜಗುಣರಾಜು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ವೈಯಕ್ತಿಕ ಸಹಾಯ ನೀಡಿದ್ದಾರೆ.
ಮೂರ್ತಿ ಅವರ ಮನೆಗೆ ತೆರಳಿ ಘಟನೆಯ ಸಂಪೂರ್ಣ ವಿವರ ಪಡೆದ ನಿಜಗುಣ ರಾಜು ಅವರು ಸರ್ಕಾರದಿಂದ ಘೋಷಣೆ ಮಾಡಲಾಗಿರುವ ಪರಿಹಾರವನ್ನು ತ್ವರಿತವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾನಿಗೀಡಾಗಿರುವ ಮನೆಯನ್ನು ನಿರ್ಮಾಣ ಮಾಡಿಕೊಡಬೇಕು. ಕುಟುಂಬದ ನೆರವಿಗೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ದಡದಹಳ್ಳಿ ಗ್ರಾಮದಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಪಟ್ಟಿ ಮಾಡಲಾಗಿದೆ. ಇನ್ನೂ ಕೆಲವು ಮನೆಗಳು ಶಿಥಿಲಗೊಂಡಿದ್ದು ಇವುಗಳಿಗೂ ಸೂಕ್ತ ಪರಿಹಾರ ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ಕಂದಾಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತೊಮ್ಮೆ ಪರಿಶೀಲಿಸಬೇಕೆಂದು ನಿಜಗುಣರಾಜು ಅವರು ಸೂಚನೆ ನೀಡಿದ್ದಾರೆ.