ನವದೆಹಲಿ: ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿಗಳ ಗಲ್ಲುಶಿಕ್ಷೆಗೆ ತಡೆನೀಡಿದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ಕೇಂದ್ರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆ.11 ರಂದು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ಗಲ್ಲುಶಿಕ್ಷೆ ವಿಚಾರದಲ್ಲಿ ಮತ್ತಷ್ಟು ವಿಳಂಬವಾಗಬಹುದು. ಹೀಗಾಗಿ ಕೇಂದ್ರದ ಅರ್ಜಿಯ ಮೇಲೆ ನಾಲ್ವರು ಅಪರಾಧಿಗಳಿಗೆ ನೋಟಿಸ್ ಹೊರಡಿಸಬೇಕು ಎಂದು ಕೇಂದ್ರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮನವಿ ಮಾಡಿಕೊಂಡಿದ್ದಾರೆ.
ಇದನ್ನು ಗಂಭೀರವಾಗಿ ಪರಿಗಣಿಸದೇ ಇರುವ ನ್ಯಾಯಮೂರ್ತಿ ಆರ್. ಭಾನುಮತಿ ನೇತೃತ್ವದ ತ್ರಿಸದಸ್ಯ ಪೀಠವು ಫೆ. 11ರಂದು ವಿಚಾರಣೆಯನ್ನು ಕೈತ್ತಿಕೊಳ್ಳಲಾಗುವುದು. ನೋಟಿಸ್ ನೀಡಬೇಕೋ ಅಥವಾ ಬೇಡವೋ ಎಂದು ನಿರ್ಧರಿಸಲಾಗುವುದು ಎಂದು ಮೆಹ್ತಾ ಅವರಿಗೆ ತಿಳಿಸಿದೆ. ತ್ರಿಸದಸ್ಯ ಪೀಠವು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡಿದೆ.
ಈ ಪ್ರಕರಣದಲ್ಲಿ ದೇಶದ ಜನತೆಯ ತಾಳ್ಮೆಯನ್ನು ಪರೀಕ್ಷಿಸಲಾಗುತ್ತಿದೆ. ಈ ವಿಚಾರದಲ್ಲಿ ಪೀಠವು ಕೂಡ ಕಾನೂನನ್ನು ಬಿಟ್ಟುಕೊಡುತ್ತಿದೆ ಎಂದು ಮೆಹ್ತಾ ಅವರು ನ್ಯಾಯಾಲಯದ ಮುಂದೆ ಹೇಳಿಕೊಂಡಿದ್ದಾರೆ. (ಏಜೆನ್ಸೀಸ್)