More

    ಜನವರಿಗೆ ಜಿಲ್ಲೆಗೆ ನಿತಿನ್ ಗಡ್ಕರಿ ಭೇಟಿ: ಸಂಸದ ರಾಘವೇಂದ್ರ

    ಶಿವಮೊಗ್ಗ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜನವರಿ ಎರಡು ಅಥವಾ ಮೂರನೇ ವಾರದಲ್ಲಿ ಶಿವಮೊಗ್ಗಕ್ಕೆ ಆಗಮಿಸಲಿದ್ದು ಜಿಲ್ಲೆಯಲ್ಲಿ ಶಂಕುಸ್ಥಾಪನೆಗೆ ಸಜ್ಜಾಗಿರುವ 2,138 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಹಾಗೂ 139 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.

    ಕಳಸವಳ್ಳಿ-ಸಿಗಂದೂರು ಸೇತುವೆ ಸಂಪರ್ಕ ರಸ್ತೆಗೆ ಡಿಪಿಆರ್ ಸಿದ್ಧಪಡಿಸಲು ಸೂಚಿಸಲಾಗಿದೆ. ಹಿನ್ನೀರು ಹೆಚ್ಚಿದ್ದರೂ, ಕಡಿಮೆ ಇದ್ದರೂ ಕಾಮಗಾರಿ ಮೇಲೆ ಪರಿಣಾಮ ಬೀರುತ್ತಿದೆ. ಹಾಗಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನೇ ಸ್ಥಳಕ್ಕೆ ಕರೆದೊಯ್ದು ಕಾಮಗಾರಿ ವೇಗಕ್ಕೆ ಏನೆಲ್ಲ ಮಾಡಬೇಕು ಎಂಬುದನ್ನು ಪರಿಶೀಲಿಸಲಾಗುವುದು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಪ್ರಮುಖವಾಗಿ 538 ಕೋಟಿ ರೂ. ವೆಚ್ಚದಲ್ಲಿ ನೆಲ್ಲಿಸರ ಕ್ಯಾಂಪ್‌ನಿಂದ ತೀರ್ಥಹಳ್ಳಿವರೆಗೆ, 650 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಲಯನ್ ಸಫಾರಿಯಿಂದ ತಾಳಗುಪ್ಪದವರೆಗೆ ದ್ವಿಪಥ ರಸ್ತೆಗಳನ್ನು ಚತುಷ್ಪಥ ರಸ್ತೆಗಳನ್ನಾಗಿ ಅಗಲೀಕರಣ ಮಾಡುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಬೈಂದೂರು-ರಾಣೆಬೆನ್ನೂರು ವಿಭಾಗದಲ್ಲಿ 19.77 ಕೋಟಿ ರೂ.ವೆಚ್ಚದಲ್ಲಿ ಸೇತುವೆಗಳು, 55.62 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ-ಮಂಗಳೂರು ರಸ್ತೆಯಲ್ಲಿ ತುಂಗಾ ನದಿ ಸೇತುವೆ, 43.90 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ-ಚಿತ್ರದುರ್ಗ ನಡುವಿನ ರೈಲ್ವೆ ಮೇಲ್ಸೇತುವೆ (ಡಿಸೆಂಬರ್ ಅಂತ್ಯದೊಳಗೆ ಪೂರ್ಣ), 20.12 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಬೈಪಾಸ್‌ನಲ್ಲಿ ತುಂಗಾನದಿಗೆ ಸೇತುವೆ ಕಾಮಗಾರಿ ಮುಕ್ತಾಯಗೊಂಡು ಉದ್ಘಾಟನೆಗೆ ಸಿದ್ಧವಾಗಿವೆ ಎಂದರು.
    ಶಾಸಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮುಖಂಡರಾದ ಎಸ್.ದತ್ತಾತ್ರಿ, ಎಸ್.ಜ್ಞಾನೇಶ್ವರ್, ಶ್ರೀನಾಥ್, ರಾಜು ತಲ್ಲೂರು, ಎನ್.ಕೆ.ಜಗದೀಶ್, ವಿನ್ಸಂಟ್, ಬಳ್ಳೇಕೆರೆ ಸಂತೋಷ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts