ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ 51ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಯಶವಂತ ಕುಮಾರ್ ಮಂಗಳವಾರ ತೀರ್ಪು ಪ್ರಕಟಿಸಿದರು.
ಪಿಎಸ್ಐ ಹಗರಣದಲ್ಲಿ ಪೌಲ್ ಅವರು 35ನೇ ಆರೋಪಿಯಾಗಿದ್ದು, ಇನ್ನೂ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕಿದೆ. ಪೌಲ್ ಅವರು ಅಧಿಕಾರ ಬಳಸಿಕೊಂಡು ಪ್ರಭಾವ ಬೀರುವಂಥ ಸ್ಥಾನದಲ್ಲಿದ್ದು, ಜಾಮೀನು ನೀಡಿದರೆ, ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಜತೆಗೆ, ಹಗರಣಕ್ಕೆ ಸಂಬಂಧಿಸಿದ ಸಿಸಿ ಕ್ಯಾಮರಾ ದೃಶ್ಯಗಳನ್ನು ಇನ್ನೂ ವಿಶ್ಲೇಷಣೆ ನಡೆಸಬೇಕಿದೆ. ಆದ್ದರಿಂದ, ಈ ಹಂತದಲ್ಲಿ ಜಾಮೀನು ನೀಡಲಾಗದು ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ಅಮೃತ್ ಪೌಲ್ ಅರ್ಜಿ ವಜಾಗೊಳಿಸಿದೆ.
ಸಿಐಡಿ ವಿಶೇಷ ಅಭಿಯೋಜಕ ಪಿ.ಪ್ರಸನ್ನಕುಮಾರ್, ಎಡಿಜಿಪಿ ದರ್ಜೆಯ ಉನ್ನತ ಅಧಿಕಾರಿಯಾಗಿರುವ ಆರೋಪಿ ಈಗಾಗಲೇ ಪ್ರಕರಣದ ಸಹ ಆರೋಪಿಗಳಿಗೆ ಬೆದರಿಕೆ ಒಡ್ಡಿದ್ದಾರೆ. ತಮ್ಮ ಹೆಸರು ಬಹಿರಂಗ ಪಡಿಸಬಾರದು, ಒಂದೊಮ್ಮೆ ಹೆಸರು ಹೊರ ಬಂದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೆದರಿಸಿದ್ದಾರೆ. ಒಎಂಆರ್ ಶೀಟ್ಗಳನ್ನು ಇರಿಸಲಾಗಿದ್ದ ಸ್ಟ್ರಾಂಗ್ ರೂಂ ಕೀಗಳನ್ನು ಆರೋಪಿಗಳಿಗೆ ನೀಡುವ ಮೂಲಕ ಪೌಲ್ ಹಗರಣದಲ್ಲಿ ನೇರ ಭಾಗಿದಾರರಾಗಿದ್ದಾರೆ. ಅರ್ಜಿದಾರರ ವಿರುದ್ಧದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಈ ಹಂತದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಆದ್ದರಿಂದ, ಆರೋಪಿಗೆ ಜಾಮೀನು ನೀಡಬಾರದು ಎಂದು ಬಲವಾದ ಆಕ್ಷೇಪಣೆ ಸಲ್ಲಿಸಿದ್ದರು.
ಪಿಎಸ್ಐ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಧೀಶ ಆನಂದ್ ಟಿ. ಚವ್ಹಾಣ್ ಜು.25ರಂದು ವಜಾಗೊಳಿಸಿದ್ದರು. ಇದರಿಂದ, ಪೌಲ್ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು.
ಖಾಸಗಿ ಶಾಲೆಯವರು ಬೆಚ್ಚಿಬೀಳುವಂಥ ಆಶ್ವಾಸನೆ ಕೊಟ್ಟ ಕೇಜ್ರಿವಾಲ್: ಎಲ್ಲಿ, ಏನು?