ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.
ತಾಲೂಕಿನ ಹಲಗಾ ಗ್ರಾಮದಲ್ಲಿ ಬುಧವಾರ ಜರುಗಿದ ಬೂತ್ಮಟ್ಟದ ಅಧ್ಯಕ್ಷರ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭಾ ಉಪ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಗೆ ಲಕ್ಷಕ್ಕೂ ಅಧಿಕ ಮತಗಳು ಲಭಿಸುವಂತೆ ನೋಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಕಾರ್ಯಕರ್ತರು ಈಗಿಂದಲೇ ಚಟುವಟಿಕೆ ಆರಂಭಿಸಬೇಕು ಎಂದು ಕರೆ ನೀಡಿದರು.
ಜಾಗೃತಿ ಮೂಡಿಸಿ: 2019ರ ಲೋಕಸಭಾ ಚುನಾವಣೆಯಲ್ಲಿ ದಿ. ಸುರೇಶ ಅಂಗಡಿ ಅವರಿಗೆ ಗ್ರಾಮೀಣ ಕ್ಷೇತ್ರದಲ್ಲಿ 75 ಸಾವಿರಕ್ಕೂ ಅಧಿಕ ಮತ ಲಭಿಸಿತ್ತು. ಈ ಬಾರಿ ಪಕ್ಷದಿಂದ ಯಾರೇ ಸ್ಪರ್ಧಿಸಿದರೂ ಲಕ್ಷಕ್ಕಿಂತ ಹೆಚ್ಚಿನ ಮತಗಳು ಅಭ್ಯರ್ಥಿಗೆ ಲಭಿಸುವಂತಾಗಬೇಕು. ಇದಕ್ಕಾಗಿ ಕಾರ್ಯಕರ್ತರು ಉತ್ತರ ಕ್ಷೇತ್ರದಲ್ಲಿ ಪ್ರತಿ ಮನೆ ಮನೆಗೆ ತೆರಳಿ ಸರ್ಕಾರಗಳ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು. ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಗ್ರಾಮೀಣ ಕ್ಷೇತ್ರದಿಂದಲೇ ಹೆಚ್ಚಿನ ಮತ ಕೊಡಿಸುವ ಮೂಲಕ ದಾಖಲೆ ಪ್ರಮಾಣದಲ್ಲಿ ಗೆಲ್ಲಿಸಲಾಗುವುದು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ನಿರಂತರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಬೆಳಗಾವಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ, ಬಸವರಾಜ ಧಮ್ಮಣಗಿ, ಪಂಕಜ ಘಾಡಿ, ಯಲ್ಲೇಶ ಕೋಲಕಾರ ಇತರರು ಪಾಲ್ಗೊಂಡಿದ್ದರು.