ನವದೆಹಲಿ: ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮನಮೋಹನ್ ಅವರಿದ್ದ ಏಕಸದಸ್ಯ ಪೀಠವು ಕೇಜ್ರಿವಾಲ್ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಪದೇ ಪದೇ ಅರ್ಜಿಗಳನ್ನು ಸಲ್ಲಿಸುತ್ತಿರುವುದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಇದಲ್ಲದೆ ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡವನ್ನು ವಿಧಿಸಿದ್ದಾರೆ.
ನೀವು ತಿಳಿದಿರುವಂತೆ ಸೀಕ್ವೆನ್ಸ್ ಹೊಂದಿರುವುದಕ್ಕೆ ಇದೇನು ಜೇಮ್ಸ್ ಬಾಂಡ್ ಚಿತ್ರವಲ್ಲ. ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬೇಕೋ ಅಥವಾ ಭೆಡವೋ ಎಂಬುದನ್ನು ಲೆಫ್ಟಿನೆಂಟ್ ಗವರ್ನರ್ ನಿರ್ಧರಿಸಲಿದ್ದಾರೆ. ರಾಜಕೀಯ ಉದ್ದೇಶದಿಂದ ನೀವು ಇಲ್ಲಿಗೆ ಬಂದಿದ್ದೀರಿ ಅಷ್ಟೇ ಎಂದು ಅರ್ಜಿದಾರರ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಕಾರ್ಮಿಕನನ್ನು ಮೆಟ್ರೋದೊಳಗೆ ಬಿಡದ ಸಿಬ್ಬಂದಿ; BMRCL ಕೊಟ್ಟ ಸ್ಪಷ್ಟನೆ ಹೀಗಿದೆ
ಕೇಜ್ರಿವಾಲ್ ವಜಾಗೊಳಿಸುವಂತೆ ಮಾರ್ಚ್ 28ರಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ‘ಈ ವಿಚಾರದಲ್ಲಿ ನ್ಯಾಯಾಂಗವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಸಾಂವಿಧಾನಿಕ ವೈಫಲ್ಯ ಕಂಡುಬಂದಲ್ಲಿ ಕಾರ್ಯಾಂಗವು ಅದನ್ನು ಸರಿಪಡಿಸುತ್ತದೆ’ ಎಂದು ಅದು ಹೇಳಿತ್ತು.
ಏಪ್ರಿಲ್ 4ರಂದು ಮತ್ತೊಂದು ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ, ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಆಯ್ಕೆಯಾಗಿದ್ದು, ಲೆಫ್ಟಿನೆಂಟ್ ಗವರ್ನರ್ ಅವರನ್ನು ಸಂಪರ್ಕಿಸುವಂತೆ ಅರ್ಜಿದಾರರಿಗೆ ತಿಳಿಸಿತ್ತು.