More

    ಅತಿಥಿ ಉಪನ್ಯಾಸಕರ ನೇಮಕಾತಿಗೆ ಒತ್ತಾಯಿಸಿ ಎನ್‌ಎಸ್‌ಯುಐ ಮನವಿ

    ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಭರ್ತಿಯಾಗದ ಪಿಜಿ(ಸ್ನಾತಕೋತ್ತರ ಪದವಿ) ಸೀಟ್‌ಗಳು ಹಾಗೂ ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಶುಕ್ರವಾರ ಎನ್‌ಎಸ್‌ಯುಐ ಪದಾಧಿಕಾರಿಗಳು ಕುವೆಂಪು ವಿವಿ ಕುಲಪತಿ ಪ್ರೊ.ಎಚ್.ವೆಂಕಟೇಶ್ ಅವರಿಗೆ ಮನವಿ ಮಾಡಿದರು.

    ಕುವೆಂಪು ವಿವಿಯಲ್ಲಿ 2023-24ನೇ ಸಾಲಿನ ಪಿಜಿ ಪ್ರವೇಶ ಮುಕ್ತಾಯಗೊಂಡಿದ್ದು, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಲಕರ ಕೋಟಾದ ಸೀಟುಗಳಿಗೆ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆದಿಲ್ಲ. ಒಬಿಸಿ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಮೀಸಲಾತಿಯಲ್ಲಿ ಪ್ರವೇಶ ಸಿಗದೇ ವಂಚಿತರಾಗಿದ್ದಾರೆ. ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲರ ಕೋಟಾದ ಸೀಟುಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳೇ ಇಲ್ಲದಿರುವುದರಿಂದ ಅವಕಾಶ ವಂಚಿತರಾಗಿರುವ ಒಬಿಸಿ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಕೌನ್ಸೆಲಿಂಗ್ ನಡೆಸಿ ಖಾಲಿ ಉಳಿದಿರುವ ಸೀಟುಗಳನ್ನು ಭರ್ತಿ ಮಾಡಬೇಕೆಂದು ಮನವಿ ಮಾಡಿದರು.
    ವಿವಿ ವ್ಯಾಪ್ತಿಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆ ಇದೆ. ಆದರೂ ವಿವಿಯು ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಪ್ರತಿ ವರ್ಷ ಕಾಲೇಜುಗಳು ಆರಂಭವಾಗುವ ಮೊದಲೇ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕು. ಆದರೆ, ಈ ಬಾರಿ ತರಗತಿಗಳು ಆರಂಭವಾಗಿ ಸೆಮಿಸ್ಟರ್ ಪರೀಕ್ಷೆಗಳು ಸಮೀಪಿಸುತ್ತಿದ್ದರೂ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಂಡಿಲ್ಲ. ಈ ಬಗ್ಗೆ ಎನ್‌ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಲವಾರು ಬಾರಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ, ಕುಲಸಚಿವರಿಗೆ ಮನವಿ ಮಾಡಿದ್ದಾರೆ. ಆದರೆ, ಇದುವರೆಗೂ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸದೇ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ದೂರಿದರು.
    ತರಗತಿಗಳು ಆರಂಭವಾಗಿ ಎರಡು ತಿಂಗಳಾಗುತ್ತಾ ಬಂದಿದ್ದು, ನಿಗದಿತ ಪಠ್ಯಕ್ರಮಗಳ ಬೋಧನೆ ನಡೆದಿಲ್ಲ. ಸೆಮಿಸ್ಟರ್ ಪರೀಕ್ಷೆ ಹತ್ತಿರವಾಗುತ್ತಿದ್ದು, ಪಾಠವನ್ನೇ ಕೇಳದೆ ಪರೀಕ್ಷೆ ಬರೆಯುವುದು ಹೇಗೆಂಬ ಆತಂಕ ವಿದ್ಯಾರ್ಥಿಗಳಲ್ಲಿ ಮನೆಮಾಡಿದೆ. ಆದ್ದರಿಂದ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ನಿಗದಿತ ಪಠ್ಯಕ್ರಮಗಳನ್ನು ಮುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದೇ ಇದೇ ರೀತಿ ವಿದ್ಯಾರ್ಥಿ ವಿರೋಧಿ ಧೋರಣೆ ಮುಂದುವರಿಸಿದರೆ ವಿವಿ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಎನ್‌ಎಸ್‌ಯುಐ ಗ್ರಾಮಾಂತರ ಅಧ್ಯಕ್ಷ ಎಸ್.ಎನ್.ವಿಜಯಕುಮಾರ್, ಮುಖಂಡರಾದ ಹರ್ಷಿತ್, ಮುರುಗೇಶ್, ನಿಖಿಲ್, ಕೀರ್ತಿ ಮನವಿ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts