ಶಿವಮೊಗ್ಗ: ಎನ್ಎಸ್ಯುಐ ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಬೆಳೆಸುವುದಲ್ಲದೆ ಸಮಾಜದಲ್ಲಿ ವ್ಯಕ್ತಿಗತವಾಗಿ ಜವಾಬ್ದಾರಿ ಹೆಚ್ಚಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಗುರುವಾರ ಎನ್ಎಸ್ಯುಐ ಶಿವಮೊಗ್ಗ ಜಿಲ್ಲಾ ಘಟಕದ ಕಚೇರಿ ಉದ್ಘಾಟಿಸಿ ಮಾತನಾಡಿು, ನಾನೂ ಎನ್ಎಸ್ಯುಐನಿಂದ ರಾಜಕೀಯ ಜೀವನ ಆರಂಭಿಸಿದೆ. ಇಂದು ರಾಜಕೀಯವಾಗಿ ಎತ್ತರಕ್ಕೆ ಬೆಳೆದಿದ್ದೇನೆ. ವಿದ್ಯಾರ್ಥಿ ದೆಸೆಯಲ್ಲಿಯೇ ನನ್ನಲ್ಲಿ ರಾಜಕೀಯ ಪ್ರಜ್ಞೆ ಮೂಡಿಲು ಇದು ಸಹಕಾರಿಯಾಯಿತು ಎಂದರು.
ಎನ್ಎಸ್ಯುಐ ಭವಿಷ್ಯದ ನಾಯಕರನ್ನು ಬೆಳೆಸುತ್ತಿದೆ. ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿದರೆ ಬೇರೆಲ್ಲೂ ಎನ್ಎಸ್ಯುಐ ಇಷ್ಟೊಂದು ಸುಸಜ್ಜಿತ ಕಚೇರಿ ಹೊಂದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ವಿದ್ಯಾರ್ಥಿ ಕಾಂಗ್ರೆಸ್ ಮುಖಂಡರು ಸಕ್ರಿಯವಾಗಿದ್ದು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಎಂಎಲ್ಸಿ ಆರ್.ಪ್ರಸನ್ನಕುಮಾರ್ ಮಾತನಾಡಿ, 43 ವರ್ಷಗಳ ಹಿಂದೆ ನಾನು ಕೂಡ ಎನ್ಎಸ್ಯುಐ ಮೂಲಕವೇ ರಾಜಕೀಯ ಜೀವನ ಆರಂಭಿಸಿದ್ದೆ. ಎನ್ಎಸ್ಯುಐನಿಂದ ಬಂದವರು ಎಂದಿಗೂ ಕಾಂಗ್ರೆಸ್ ಬಿಟ್ಟಿಲ್ಲ, ಬಿಡುವುದೂ ಇಲ್ಲ. ಪಕ್ಷದ ಬೇರುಗಳಂತೆ ಕೆಲಸ ಮಾಡುತ್ತಿದ್ದಾರೆ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಮಾತನಾಡಿದರು. ಎನ್ಎಸ್ಯುಐ ಜಿಲ್ಲಾಧ್ಯಕ್ಷ ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಎಚ್.ಎಂ.ರೇವಣ್ಣ, ಎಂಎಲ್ಸಿ ಸಲೀಂ ಅಹಮದ್, ಮಾಜಿ ಸಂಸದ ಉಗ್ರಪ್ಪ, ಎನ್ಎಸ್ಯುಐ ಅಧ್ಯಕ್ಷ ಕೀರ್ತಿ ಗಣೇಶ್, ಜಿಪಂ ಮಾಜಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಪಾಲಿಕೆ ಪ್ರತಿಪಕ್ಷದ ನಾಯಕಿ ರೇಖಾ ರಂಗನಾಥ್, ಮುಖಂಡರಾದ ವಿಜಯಕುಮಾರ್ ಸಂತೇಕಡೂರು, ಕೆ.ದೇವೇಂದ್ರಪ್ಪ, ಸಿ.ಜಿ.ಮಧುಸೂದನ್, ಕೆ.ಚೇತನ್, ಮಹಮ್ಮದ್ ನಿಹಾಲ್ ಇತರರಿದ್ದರು.