More

    ಕಾಂಗ್ರೆಸ್​ನಿಂದ ಒಬಿಸಿ ಮೀಸಲಾತಿ ಮುಸ್ಲಿಮರ ಪಾಲು: ಮೋದಿಗೆ ಸಿದ್ದರಾಮಯ್ಯ ತಿರುಗೇಟು

    ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್​ ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿ ಕಿತ್ತು ಮುಸ್ಲಿಂಮರಿಗೆ ನೀಡಲಾಗುತ್ತಿದೆ ಎಂಬ ಪ್ರಧಾನಿ ಮೋದಿ ಹೇಳಿಕೆ ಹಸಿ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

    ಇದನ್ನೂ ಓದಿ: ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಎಫ್‌ಐಆರ್ ದಾಖಲು!

    ಈ ಬಗ್ಗೆ ತಮ್ಮ ಎಕ್ಸ್​ ಅಧಿಕೃತ ಖಾತೆ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ, ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯ ವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

    ಜನರ ಕ್ಷಮೆ ಕೇಳಬೇಕು: ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದೋ ಈ ಬೇಜವಾಬ್ದಾರಿತನದ ಆರೋಪವನ್ನು ಆಧಾರಗಳನ್ನು ನೀಡಿ ಸಾಬೀತುಪಡಿಸಬೇಕು ಇಲ್ಲದೆ ಇದ್ದರೆ ದೇಶದ ಜನರ ಕ್ಷಮೆ ಕೇಳಬೇಕು. ಹಿಂದುಳಿದ ಜಾತಿ ಮತ್ತು ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿ ಅವರು ದೇಶದ ಮುಂದೆ ಇಡಬೇಕು ಆಗ್ರಹಿಸಿದ್ದಾರೆ.

    ಈ ದೇಶದ ದುರಂತವೇ ಸರಿ: ಸಂವಿಧಾನದತ್ತವಾದ ಮೀಸಲಾತಿಯನ್ನು ಮನಬಂದಂತೆ ಬದಲಾವಣೆ ಮಾಡಲು ಸಾಧ್ಯ ಇಲ್ಲ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಆಧಾರದಲ್ಲಿ ಮಾತ್ರ ಮೀಸಲಾತಿಯ ಪರಿಷ್ಕರಣೆ ಸಾಧ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಪರಿಷ್ಕರಿಸುವ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಯೂ ಇಲ್ಲ. ಇದಕ್ಕಾಗಿ ಸಂಸತ್‌ನ ಉಭಯ ಸದನಗಳ ಒಪ್ಪಿಗೆಯೊಂದಿಗೆ ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಇಂತಹದ್ದೊಂದು ಕನಿಷ್ಠ ಜ್ಞಾನ ಒಬ್ಬ ಪ್ರಧಾನಮಂತ್ರಿಗೆ ಇಲ್ಲದಿರುವುದು ಈ ದೇಶದ ದುರಂತವೇ ಸರಿ ಎಂದು ಕಿಡಿಕಾರಿದ್ದಾರೆ.‘

    ಮೀಸಲಾತಿಯನ್ನು ಪ್ರಶ್ನಿಸಿಲ್ಲ: ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ ಚಿನ್ನಪ್ಪರೆಡ್ಡಿ ಆಯೋಗದ ವರದಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಗಮನಕ್ಕೆ ತೆಗೆದುಕೊಂಡು ಮುಸ್ಲಿಮರನ್ನು ಹಿಂದುಳಿದ ಜಾತಿಗಳ 2ಬಿ ವರ್ಗಕ್ಕೆ ಸೇರಿಸಲಾಗಿರುವುದು ನಿಜ. ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಈ ಮೀಸಲಾತಿ ಜಾರಿಯಲ್ಲಿದೆ. ಕೇಂದ್ರದಲ್ಲಿ ಹಿಂದೆ ಅಧಿಕಾರದಲ್ಲಿದ್ದ ರಾಜ್ಯ ಬಿಜೆಪಿ ಸರ್ಕಾರವಾಗಲಿ, ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಸರ್ಕಾರವಾಗಲಿ ಇಲ್ಲಿಯವರೆಗೆ ಈ ಮೀಸಲಾತಿಯನ್ನು ಪ್ರಶ್ನಿಸಿಲ್ಲ. ಬಿಜೆಪಿಯೂ ಸೇರಿದಂತೆ ಯಾರೂ ಕೂಡಾ ಇದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಿಲ್ಲ ಎಂದು ದೂರಿದರು.

    ಮೋದಿ ಗಮನದಲ್ಲಿ ಇಲ್ಲದೆ ಇರುವುದು ವಿಷಾದನೀಯ: ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಧರ್ಮದ ಆಧಾರದಲ್ಲಿ ಮತವಿಭಜನೆಯ ಏಕೈಕ ದುರುದ್ದೇಶದಿಂದ ಬಸವರಾಜ ಬೊಮ್ಮಾಯಿ ಸರ್ಕಾರ ಮೀಸಲಾತಿಯನ್ನು ಅಡ್ಡಾದಿಡ್ಡಿಯಾಗಿ ಪರಿಷ್ಕರಿಸಲು ಹೊರಟು ಸುಪ್ರೀಂ ಕೋರ್ಟಿನಿಂದ ಛೀಮಾರಿಗೆ ಗುರಿಯಾಗಿರುವುದನ್ನು ಪ್ರಧಾನಿ ಮೋದಿ ಅವರು ಮರೆತಂತೆ ಕಾಣುತ್ತಿದೆ. ಮುಸ್ಲಿಮರಿಗೆ ಇದ್ದ ಶೇಕಡಾ ನಾಲ್ಕರ ಮೀಸಲಾತಿಯನ್ನು ರದ್ದು ಮಾಡಿ ಅದನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿರುವ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮುಂದಿನ ಆದೇಶದ ವರೆಗೆ ಪರಿಷ್ಕೃತ ಮೀಸಲಾತಿಯನ್ನು ಜಾರಿಗೊಳಿಸಬಾರದೆಂದು ಆದೇಶ ನೀಡಿದೆ. ಇಂತಹದ್ದೊಂದು ಪ್ರಮುಖ ಮಾಹಿತಿ ಕೂಡಾ ಪ್ರಧಾನಮಂತ್ರಿಯವರ ಗಮನದಲ್ಲಿ ಇಲ್ಲದೆ ಇರುವುದು ವಿಷಾದನೀಯ ಎಂದಿದ್ದಾರೆ.

    ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದರೂ ತಮ್ಮ ಸಾಧನೆಯ ಬಗ್ಗೆ ಹೇಳಲು ಏನೂ ಇಲ್ಲದಿರುವುದು ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ವಿಫಲ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದೆ. ಒಬ್ಬ ಅನಕ್ಷರಸ್ಥ ಮಾತ್ರ ಈ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡಲು ಸಾಧ್ಯ. ಪ್ರಧಾನಿಯವರು ಸ್ವಯಂ ಪ್ರದರ್ಶಿಸುತ್ತಿರುವ ಅಜ್ಞಾನವನ್ನು ನೋಡಿದರೆ ಇವರ ಪದವಿ ಶಿಕ್ಷಣದ ಬಗೆಗಿನ ಸಂಶಯಗಳು ನಿಜ ಇರುವಂತೆ ಕಾಣಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ದೇವೇಗೌಡರು ಈಗಲೂ ತಮ್ಮ ನಿಲುವಿಗೆ ಬದ್ಧರಾಗಿದ್ದಾರಾ?: ಮುಸ್ಲಿಂ ಮೀಸಲಾತಿಯನ್ನು ವಿರೋಧಿಸುತ್ತಿರುವ ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಮೋದಿಯವರ ಆಪ್ತಮಿತ್ರ ಮತ್ತು ಬಿಜೆಪಿಯ ಹೊಸ ಸಂಗಾತಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಿದ್ದೇ ನಾನು ಎಂದು ಕೊಚ್ಚಿಕೊಳ್ಳುತ್ತಿದ್ದ ದೇವೇಗೌಡರು ಈಗಲೂ ತಮ್ಮ ನಿಲುವಿಗೆ ಬದ್ಧರಾಗಿದ್ದಾರಾ? ಇಲ್ಲವೇ ನರೇಂದ್ರ ಮೋದಿಯವರಿಗೆ ಶರಣಾಗಿ ತಮ್ಮ ಹಿಂದಿನ ನಿಲುವನ್ನು ಬದಲಾಯಿಸಿಕೊಳ್ಳುತ್ತರಾ? ಎಂಬುದನ್ನು ಅವರು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts