ಸುಂಟಿಕೊಪ್ಪ: ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಕ್ಕಳು ಅರಿವು ಹೊಂದುವುದರ ಜತೆಗೆ ಪಾಲಿಸುವುದೂ ಮುಖ್ಯ ಎಂದು ಕುಶಾಲನಗರ ಡಿವೈಎಸ್ಪಿ ಗಂಗಾಧರಪ್ಪ ಹೇಳಿದರು.
ಇಲ್ಲಿನ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಸುಂಟಿಕೊಪ್ಪ ಜೆಸಿಐ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾನೂನು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಸ್ತೆ ಸಂಚಾರ ನಿಯಮವನ್ನು ಉಲ್ಲಂಘಿಸಿದಾಗ ಅಪಘಾತ ಸಂಭವಿಸುತ್ತದೆ. ಇದರಿಂದ ಅನೇಕ ಜನರು ಮೃತಪಟ್ಟಿದ್ದಾರೆ. ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಸಾರಿಗೆ ಮತ್ತು ಪೊಲೀಸ್ ಇಲಾಖೆ ಜಾಗೃತಿ ಮೂಡಿಸುತ್ತಿದೆ. ವಾಹನ ಸಂಚಾರ ಮಾಡುವಾಗ ಹೆಚ್ಚಿನ ಜಾಗ್ರತೆ ವಹಿಸಬೇಕು. ಮಕ್ಕಳು ಮನೆಯಿಂದ ಶಾಲೆಗೆ ಮತ್ತು ಶಾಲೆಯಿಂದ ಮನೆಗೆ ತೆರಳುವ ಸಂದರ್ಭ ರಸ್ತೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದರು.
ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನಗಳನ್ನು ಚಾಲನೆ ಮಾಡುವ ವೇಳೆ ಮೊಬೈಲ್ನಲ್ಲಿ ಮಾತನಾಡಬಾರದು. ಕಾರು ಚಾಲಕರು ಸೀಟ್ ಬೆಲ್ಟ್ ಧರಿಸಬೇಕು. ಸಮಾಜದಲ್ಲಿ ಕಾನೂನು ಪಾಲಿಸದ ಯುವಕರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು. ತುರ್ತು ಸಂದರ್ಭ ಪೊಲೀಸ್ ಇಲಾಖೆಯಿಂದ ನೀಡಲಾದ ಸಂಖ್ಯೆಗೆ ಕರೆ ಮಾಡಿ ಎಂದು ಮಾಹಿತಿ ನೀಡಿದರು.
ಸುಂಟಿಕೊಪ್ಪ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಜೆಸಿಐ ಅಧ್ಯಕ್ಷ ಸಂಪತ್ಕುಮಾರ್, ಸದಸ್ಯರಾದ ದೇವಿ ಪ್ರಸಾದ್, ಕಾಯರ್ಮಾರ್, ಡೆನ್ನಿಸ್ ಡಿಸೋಜ, ಪೆಲ್ಸಿ ಡೆನ್ನಿಸ್ ಡಿಸೋಜ, ಅರುಣ್ಕುಮಾರ್, ಸತೀಶ್ಕುಮಾರ್, ಪ್ರನೀತ್ ಇತರರಿದ್ದರು.