ರಾಯಚೂರು: ಹತ್ತು ವರ್ಷಗಳ ನಂತರ ಕೈಗೊಳ್ಳಲಾಗುತ್ತಿರುವ ಜನಗಣತಿ ಕಾರ್ಯವನ್ನು ಗೊಂದಲಗಳಿಗೆ ಆಸ್ಪದವಿಲ್ಲದಂತೆ ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಎಲ್ಲ ತಯಾರಿ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ದುರಗೇಶ ಸಲಹೆ ನೀಡಿದರು.
ಸ್ಥಳೀಯ ಜಿಪಂ ಸಭಾಂಗಣದಲ್ಲಿ 2021ರ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ತಾಂತ್ರಿಕ ಸಹಾಯಕರಿಗಾಗಿ ಗುರುವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಗಣತಿ ವೇಳೆ ಎದುರಾಗುವ ಸಮಸ್ಯೆಗಳ ನಿವಾರಣೆಗೆ ಕಾರ್ಯಾಗಾರ ಸಹಕಾರಿಯಾಗಲಿದೆ ಎಂದರು. ಗಣತಿ ಕುರಿತು ನೀಡಲಾಗಿರುವ ಪುಸ್ತಕಗಳನ್ನು ಅಧ್ಯಯನ ಮಾಡಿಕೊಂಡು ಮನೆ ಭೇಟಿ ವೇಳೆ ಮಾಹಿತಿ ಸಂಗ್ರಹಿಸಬೇಕು. ಮೊದಲ ಹಾಗೂ ಎರಡನೇ ಹಂತದಲ್ಲಿ ಮನೆಪಟ್ಟಿ ಹಾಗೂ ಮೊಬೈಲ್ ಆ್ಯಪ್ ಮೂಲಕ ಮಾಹಿತಿ ಸಂಗ್ರಹಿಸಬೇಕು.
ಗಣತಿಯಲ್ಲಿ ನಗರ, ಸ್ಥಳೀಯ ಸಂಸ್ಥೆಗಳ ಪಾತ್ರ ಪ್ರಮುಖವಾಗಿದ್ದು, ಗ್ರಾಮೀಣ ಮಟ್ಟದಲ್ಲಿ ಗಣತಿ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಸಂಬಂಧಿಸಿದ ಇಲಾಖೆಗಳು ಗಣತಿ ಕಾರ್ಯಕ್ಕಾಗಿ ತಮ್ಮ ಕಚೇರಿಗಳಲ್ಲಿ ಪ್ರತ್ಯೇಕ ಶಾಖೆ ತೆರೆಯುವಂತೆ ಸೂಚನೆ ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ದುರಗೇಶ ಹೇಳಿದರು. ಸಹಾಯಕ ಆಯುಕ್ತ ರಾಜಶೇಖರ ಡಂಬಳ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ಎನ್ಐಸಿ ಅಧಿಕಾರಿ ರವಿಶಂಕರ್, ನೋಡಲ್ ಅಧಿಕಾರಿ ಮುರಾರಿ ಸತ್ಯಬಾಬು ಇದ್ದರು.