ಸಿಂಧನೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೇ 31 ರಂದು ಅಧಿಕಾರ ಸ್ವೀಕರಿಸಲಿದ್ದು, ಆ ದಿನ ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಆಯಾ ಗ್ರಾಪಂ ಮಟ್ಟದಲ್ಲಿ ಅವರ ಜತೆಗೆ ಪ್ರತಿಜ್ಞೆ ಮಾಡಲು ತೀರ್ಮಾನಿಸಲಾಗಿದೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ತಿಳಿಸಿದರು.
ನಗರದ ಯುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿ ಪದಗ್ರಹಣ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಅಂದು ಕೆಪಿಸಿಸಿ ಅಧ್ಯಕ್ಷರ ಜತೆಗೆ ಕಾಂಗ್ರೆಸ್ನ ಪ್ರತಿಯೊಬ್ಬ ಕಾರ್ಯಕರ್ತರು ಕೂಡ ಅಧಿಕಾರ ಸ್ವೀಕರಿಸಿ ಪಕ್ಷ ಸಂಘಟನೆಗೆ ಮುಂದಾಗಬೇಕೆಂದು ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಂಧನೂರು ವಿಧಾನಸಭೆ ಕ್ಷೇತ್ರದಾದ್ಯಂತ ಯುವ ಕಾಂಗ್ರೆಸ್ ಹಾಗೂ ಪಕ್ಷದ ಹಿರಿಯ ನಾಯಕರ ಜತೆಗೆ ಅಧಿಕಾರ ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗ್ರಾಪಂ, ಜಿಪಂ ವ್ಯಾಪ್ತಿಯಲ್ಲಿ ಸಮಿತಿಗಳನ್ನು ರಚಿಸಿ ಉಸ್ತುವಾರಿಗಳನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.
ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಖಾಜಾಹುಸೇನ ರೌಡಕುಂದ, ಮಸ್ಕಿ ತಾಲೂಕು ಅಧ್ಯಕ್ಷ ಹುಸೇನ್ಬಾಷಾ, ನಗರಸಭೆ ಸದಸ್ಯರಾದ ಮುರ್ತುಜಾ ಹುಸೇನ, ಶರಣಪ್ಪ ಉಪ್ಪಲದೊಡ್ಡಿ, ವೆಂಕಟೇಶ ರಾಗಲಪರ್ವಿ, ಯುನೂಸ್ಪಾಷಾ, ವೀರಬಾಬು, ಜಹೀರುಲ್ಲಾ ಹಸನ್, ನಾಗರಾಜ ಕವಿತಾಳ, ವಿರುಪಣ್ಣ ಗುಡಿ ಇದ್ದರು.