ವಿಜಯಪುರ: ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಖಂಡಿಸಿ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ರಸ್ತೆ ತಡೆ ನಡೆಸಿದರು. ಅಲ್ಲದೆ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪ್ರತಿಭಟನಾ ಮೆರವಣಿಗೆ ಮೂಲಕ ಕೆಕೆಆರ್ಟಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯ ಕಾರ್ಯದರ್ಶಿ ಸಚೀನ ಕುಳಗೇರಿ ಮಾತನಾಡಿ, ರಾಜ್ಯ ಸರ್ಕಾರ ಬಸ್ ಪ್ರಯಾಣ ದರವನ್ನು ಶೇ. 15 ರಷ್ಟು ಹೆಚ್ಚಳ ಮಾಡುವುದರ ಮೂಲಕ ಬಡವರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಜನತೆಗೆ ಹೊರೆ ಮಾಡಿದೆ. ಸರ್ಕಾರಿ ಬಸ್ಗಳನ್ನೇ ಅವಲಂಬಿಸಿ ಸಾವಿರಾರು ಜನ ನಿತ್ಯವೂ ಓಡಾಡುತ್ತಾರೆ. ಆದರೆ, ಶೇ. 15 ರಷ್ಟು ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಮೂಲಕ ಆರ್ಥಿಕ ಹೊರೆಯನ್ನು ಜನಸಾಮಾನ್ಯರ ಮೇಲೆ ರಾಜ್ಯ ಸರ್ಕಾರ ಹಾಕುತ್ತಿದೆ ಎಂದು ದೂರಿದರು.
ಶಕ್ತಿ ಯೋಜನೆಯಿಂದಾಗಿ ಬಸ್ಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಅದು ಸರ್ಕಾರದ ಗಮನಕ್ಕೆ ಇದ್ದರೂ ಬಸ್ಗಳ ಸಂಖ್ಯೆ ಹೆಚ್ಚಿಸದೆ ನಿತ್ಯ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ. ಸರ್ಕಾರ ಕೂಡಲೇ ಬಸ್ಗಳ ಸಂಖ್ಯೆ ಹೆಚ್ಚಿಸಿ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರ ಪ್ರಯಾಣಕ್ಕೆ ಅನುಕೂಲ ಮಾಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.
ರಾಜ್ಯ ಸಹ ಕಾರ್ಯದರ್ಶಿ ಸುಜ್ಞಾತಾ ಕುಲಕರ್ಣಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸ್ನೇಹಾ ಹಿರೇಮಠ, ಐಶ್ವರ್ಯ ಆಸಂಗಿ, ನಗರ ಕಾರ್ಯದರ್ಶಿ ಸಂದೀಪ ಅರಳಗುಂಡಗಿ, ತಾಂತ್ರಿಕ ಪ್ರಮುಖರಾದ ಚೇತನ ಕೊರವಾರ, ನಗರ ಸಹ ಕಾರ್ಯದರ್ಶಿ ಅಭಿಷೇಕ ಬಡಿಗೇರ, ಮಹೇಶಗೌಡ ಮಿರ್ಜಿ, ಸುರೇಶ ಲೋಣಾರ, ಕಾರ್ತಿಕ ಮಾಳಿ, ಆನಂದ ಪೂಜಾರಿ, ಪ್ರವೀಣ ತನಕೇದಾರ, ದಾನಮ್ಮ ತಾರನಾಳ, ಶಂಕರ ಮಾವಿನಮರದ, ಶ್ರವಣ ರಾಠೋಡ, ಶಿಲ್ಪಾ ಪೂಜಾರಿ ಮತ್ತಿತರರಿದ್ದರು.