ಆನೇಕಲ್: ಪಾದರಾಯನಪುರದಲ್ಲಿ ಗಲಭೆ ಮಾಡಿದ ಆರೋಪಿಗಳನ್ನು ರಾಮನಗರ ಜೈಲಿಗೆ ವರ್ಗಾವಣೆ ಮಾಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿನ್ನೆ ಆತಂಕ ವ್ಯಕ್ತಪಡಿಸಿದ್ದರು. ಅಲ್ಲಿ ಇದುವರೆಗೂ ಒಂದೂ ಕರೊನಾ ಪ್ರಕರಣ ಪತ್ತೆಯಾಗಿಲ್ಲ. ಈಗ ಪಾದರಾಯನಪುರದ ಆರೋಪಿಗಳಲ್ಲಿ ಯಾರಿಗಾದರೂ ಕೊವಿಡ್-19 ಇದ್ದು, ಅವರನ್ನು ಅಲ್ಲಿಗೆ ಸ್ಥಳಾಂತರ ಮಾಡಿದರೆ ಅಪಾಯ ಆದರೆ ಏನು ಮಾಡುವುದು ಎಂದು ಪ್ರಶ್ನಿಸಿದ್ದರು.
ಇದೀಗ ಸಂಸದ ಡಿ.ಕೆ.ಸುರೇಶ್ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ರಾಜಕೀಯ ದ್ವೇಷಕ್ಕಾಗಿ ಪಾದರಾಯನಪುರ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡಿದೆ ಎಂದು ಹೇಳಿದ್ದಾರೆ.
ರಾಮನಗರ ಗ್ರೀನ್ ಝೋನ್ನಲ್ಲಿದೆ. ಇದೀಗ ಪಾದರಾಯನಪುರ ಆರೋಪಿಗಳನ್ನೇಕೆ ಇಲ್ಲಿಗೆ ಕಳಿಸಬೇಕಿತ್ತು? ಸರ್ಕಾರ ರಾಮನಗರದ ಜನರನ್ನು ಆತಂಕಕ್ಕೀಡು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಹಾಗೇ ಮೃತ ಪತ್ರಕರ್ತ ಹನುಮಂತು ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. (ದಿಗ್ವಿಜಯ ನ್ಯೂಸ್)