ಮಂಗಳೂರು: ಕರಾವಳಿ ಕರ್ನಾಟಕದ ತೆರಿಗೆದಾರರ ಹಿತಾಸಕ್ತಿಗೆ ಪೂರಕವಾಗಿ ಆದಾಯ ತೆರಿಗೆ ಪ್ರಧಾನ ಆಯುಕ್ತರ (ಪಿಸಿಐಟಿ) ಕಾರ್ಯಾಲಯವನ್ನು ಮಂಗಳೂರಿನಲ್ಲಿಯೇ ಮುಂದುವರಿಸಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಸೂಚಿಸಿದ್ದಾರೆ.
ಕಳೆದ ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯನ್ನು ಗೋವಾದ ಪಣಜಿಯ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯಲ್ಲಿ ವಿಲೀನಗೊಳಿಸುವ ನಿರ್ಧಾರವನ್ನು ಕೈಬಿಡುವಂತೆ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದೇನೆ. ಮಂಗಳೂರಿನಲ್ಲೇ ಪಿಸಿಐಟಿ ಕಚೇರಿಯನ್ನು ಮುಂದುವರಿಸಲು ಸಚಿವೆ ನಿರ್ಮಲಾ ಸೀತಾರಾಮನ್ ಸಮ್ಮತಿಸಿದ್ದಾರೆ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯನ್ನು ಪಣಜಿಯ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯಲ್ಲಿ ವಿಲೀನಗೊಳಿಸುವ ಪ್ರಸ್ತಾವ ಹೊರ ಬೀಳುತ್ತಿದ್ದಂತೆ ಕರಾವಳಿ ಜನರಿಂದ ವಿರೋಧ ವ್ಯಕ್ತವಾಗಿತ್ತು. ಉದ್ಯಮಿಗಳು ಸೇರಿದಂತೆ ವಿವಿಧ ಸಂಘಟನೆಗಳು ವಿಲೀನದ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಮನವಿಗಳನ್ನು ಸಲ್ಲಿಸಿದ್ದರು.
ಕಚೇರಿಯನ್ನು ವಿಲೀನಗೊಳಿಸದಿರುವ ನಿರ್ಧಾರ ಕೈಗೊಂಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ , ಈ ಕುರಿತಂತೆ ಸಹಕರಿಸಿದ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಪ್ರಹ್ಲಾದ್ ಜೋಶಿ ಅವರಿಗೂ ನಳಿನ್ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.
ಉದ್ಯಮಿ, ಸಿಎಗಳ ಹರ್ಷ: ಮಂಗಳೂರಿನಿಂದ ಪಣಜಿಗೆ ಕಚೇರಿ ವರ್ಗಾವಣೆ ಆಗದಂತೆ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ(ಐಸಿಎಐ)ನ ಮಂಗಳೂರು – ಉಡುಪಿ ಶಾಖೆ, ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ(ಕೆಸಿಸಿಐ) ಮತ್ತು ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಹಾಗೂ ವಿವಿಧ ವೇದಿಕೆಗಳು ಮನವಿಯನ್ನು ನೀಡಿದ್ದವು. ವಿತ್ತ ಸಚಿವರ ನಿರ್ಣಯ ಸ್ವಾಗತಾರ್ಹ ಎಂದು ಐಸಿಎಐ ಮಂಗಳೂರು ಶಾಖೆ ಅಧ್ಯಕ್ಷ ಸಿಎ ಎಸ್.ಎಸ್.ನಾಯಕ್ ಹರ್ಷ ವ್ಯಕ್ತಪಡಿಸಿದ್ದಾರೆ.
ಪಿಸಿಐಟಿ ಕಚೇರಿಯನ್ನು ಪಣಜಿಯ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯಲ್ಲಿ ವಿಲೀನಗೊಳಿಸುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ವಿತ್ತ ಸಚಿವರೊಂದಿಗೆ ವೈಯುಕ್ತಿವಾಗಿ ಮಾತನಾಡಿದ್ದೇನೆ, ಕಚೇರಿಯನ್ನು ಮಂಗಳೂರಿನಲ್ಲಿಯೇ ಮುಂದುವರಿಸಲು ಅವರು ಸೋಮವಾರವೇ ಒಪ್ಪಿಗೆ ನೀಡಿದ್ದಾರೆ.
– ನಳಿನ್ ಕುಮಾರ್ ಕಟೀಲ್, ಸಂಸದ