ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ಖುಷಿಯಾಗಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ಅಭಿಪ್ರಾಯಪಟ್ಟಿದ್ದಾರೆ. ಬ್ಯಾಟರಾಯನಪುರ ಕ್ಷೇತ್ರದ ಕುವೆಂಪುನಗರ ವಾರ್ಡ್ನಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿದ್ದಾರೆ. ಬಡ,ಮಧ್ಯಮ ವರ್ಗದ ಜನ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ, ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಆ ಸಂಕಷ್ಟವನ್ನು ಬಗೆಹರಿಸುವ ಕೆಲಸ ಮಾಡಿದೆ.
ಕೆಲಸ ಮಾಡಿದ್ದೇವೆ
ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಹಾಗೂ ಗೃಹಲಕ್ಷ್ಮಿ ಯೋಜನೆಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದ ಜನರು ಖುಷಿಯಾಗಿದ್ದಾರೆ. ಅಧಿಕಾರಕ್ಕೆ ಬಂದು ನಾಲ್ಕು ವರ್ಷದ ನಂತರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಬಹುದಿತ್ತು. ಆದರೆ, ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಮುನ್ನ ಜನರಿಗೆ ಕೊಟ್ಟಿದ್ದ ಆಶ್ವಾಸನೆಗಳನ್ನೂ ಈಡೇರಿಸುವ ಕೆಲಸ ಮಾಡಿದ್ದೇವೆ.
ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡ ಪಾರಂಪರಿಕ ಕಾರಿಡಾರ್ ನಿರ್ಮಾಣ: ಜಯರಾಮ್ ರಾಯಪುರ
ಐದು ಗ್ಯಾರಂಟಿಗಳಿಂದ ಬರುವ ಹಣವನ್ನು ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ವ್ಯಯಿಸಬೇಕು. ಪ್ರತಿ ತಿಂಗಳು ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ ಅಂದಾಜು 5 ರಿಂದ 6 ಸಾವಿರ ರೂ.ಹಣ ಸಿಗಲಿದೆ ಎಂದು ಹೇಳಿದ ಸಚಿವರು, ನಿರೀಕ್ಷೆಗೂ ಮೀರಿ ಸಾಧನೆ ಮಾಡುವ ಶಕ್ತಿ ಹೆಣ್ಣುಮಕ್ಕಳಲ್ಲಿದೆ. ಹೀಗಾಗಿ,ಅವರಿಗೂ ಸಮಾನ ಅವಕಾಶ ನೀಡಬೇಕು. ಪಾಲಕರು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ನೀಡಬೇಕು. ಹೆಣ್ಣುಮಕ್ಕಳು ಸಾಧಿಸಿದರೆ ಮಾತ್ರ ಈ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತದೆ.
ಯಾವುದೇ ಕೆಲಸ ಮಾಡಿದರೂ ಶ್ರದ್ಧೆ ನಿಷ್ಠೆಯಿಂದ ಮಾಡಬೇಕು. ಶ್ರದ್ಧೆಯಿಂದ ಮಾಡಿದ ಕೆಲಸ ಖಂಡಿತವಾಗಿ ಫಲ ನೀಡುತ್ತದೆ. ಕಠಿಣ ಪರಿಶ್ರಮದಿಂದ ನಮ್ಮೂರಿನ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಪಾಸಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಉತ್ತಮ ಅಂಕಗಳಿಸಿದ 400ಕ್ಕೂ ಅಧಿಕ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕೃಷ್ಣಭೈರೇಗೌಡ ಪತ್ನಿ ಮೀನಾಕ್ಷಿ ಶೇಷಾದ್ರಿ ಸೇರಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.