ಮೈಸೂರು: ಜೂನ್ 1 ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಬಿಲ್ ಕಟ್ಟಬೇಡಿ. ಹೆಚ್ಚುವರಿಯಾಗಿ ಬಳಸಿದ್ದರೆ ಮಾತ್ರ ಬಿಲ್ ಕಟ್ಟಿ, ಗ್ಯಾರಂಟಿ ಕಾರ್ಡ್ನಲ್ಲಿ ಕಾಂಗ್ರೆಸ್ನವರು ಎಲ್ಲಿಯೂ ಷರತ್ತುಗಳು ಅನ್ವಯ ಅಂತ ನಮೂದಿಸಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲ ಮನೆಯ ಯಜಮಾನಿಗೆ 2 ಸಾವಿರ ರೂ. ಕೊಡುವುದರ ಜತೆಗೆ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಬೇಕು. ಜನರು ನಿಮ್ಮ ಮುಖ ನೋಡಿ ಮತ ಹಾಕಿಲ್ಲ. ಗ್ಯಾರಂಟಿ ಕಾರ್ಡ್ ನೋಡಿ ಮತ ಹಾಕಿದ್ದಾರೆ ಎಂಬುದನ್ನು ಕಾಂಗ್ರೆಸ್ ನೆನಪಿಟ್ಟುಕೊಳ್ಳಲಿ ಎಂದರು.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರಿಗೆ ಬಿಜೆಪಿಯಿಂದ ಜೀವ ಬೆದರಿಕೆ ಇದೆ; ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್
ಕಾಂಗ್ರೆಸ್ಸಿನವರು ಜನರಿಗೆ ಕೊಟ್ಟ ಭರವಸೆ ಈಡೇರಿಸಬೇಕು. ರಾಜಸ್ಥಾನದಲ್ಲಿ ಇವತ್ತಿನವರೆಗೂ ಈ ಹಿಂದೆ ಕೊಟ್ಟ ಭರವಸೆ ಈಡೇರಿಸಿಲ್ಲ. ಒಂದು ವೇಳೆ ಗ್ಯಾರಂಟಿಗಳನ್ನು ಈಡೇರಿಸದಿದ್ದರೆ ಜೂನ್ 1ರಿಂದ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.
ಮೈಸೂರಿನ ಅಭಿವೃದ್ಧಿಗಾಗಿ ನಾನು ಯಾರ ಕಾಲು ಬೇಕಾದರೂ ಹಿಡಿಯುತ್ತೇನೆ. ಚುನಾವಣೆ ಬಂದಾಗ ರಾಜಕಾರಣ ಮಾಡೋಣ, ಉಳಿದ ಸಮಯದಲ್ಲಿ ಅಭಿವೃದ್ಧಿ ರಾಜಕಾರಣ ಮಾಡೋಣ. ಅಭಿವೃದ್ಧಿ ಪರ ಇರುವವರನ್ನು ಮೈಸೂರು ಜಿಲ್ಲಾ ಉಸ್ತುವಾರಿಗಳನ್ನಾಗಿ ನೇಮಿಸಬೇಕು. ಈ ವಿಚಾರವಾಗಿ ತಾವು ಸಿಎಂ ಮನೆಗೆ ಹೋಗುವುದಾಗಿ ತಿಳಿಸಿದರು.
ಜತೆಗೆ, ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಪರಿಣಾಮ ಲೋಕಸಭಾ ಚುನಾವಣೆ ಮೇಲೆ ಬೀರಲ್ಲ. ದೇಶಕ್ಕೆ ಎಂಥಹ ನಾಯಕ ಬೇಕು ಅಂತಾ ಕನ್ನಡಿಗರಿಗೆ ಗೊತ್ತಿದೆ ಎಂದು ಹೇಳಿದರು.(ಏಜೆನ್ಸೀಸ್)