ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷ ನಡೆಸುತ್ತಿದ್ದ ಪ್ರೆತಿಭಟನೆಯಲ್ಲಿ ಭಾಗಿಯಾಗಿದ್ದ ಕೆಲವು ಫೋಟೋ ಜರ್ನಲಿಸ್ಟ್ಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ.
ಫೋಟೋ ಜರ್ನಲಿಸ್ಟ್ಗಳ ಮೇಲಿನ ಹಲ್ಲೆ ಖಂಡಿಸಿ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಹಾಗೂ ದೆಹಲಿ ಪತ್ರಕರ್ತರ ಸಂಘ ಪ್ರತ್ಯೇಕ ಪ್ರಕಟಣೆಗಳನ್ನು ಹೊರಡಿಸಿದ್ದು, ಹಲ್ಲೆಯನ್ನು ಖಂಡಿಸಿವೆ ಮತ್ತು ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿವೆ. ಪೊಲೀಸ್ ಅಧಿಕಾರಿಯೊಬ್ಬ ಫೋಟೊ ಜರ್ನಲಿಸ್ಟ್ ಕುತ್ತಿಗೆ ಹಿಡಿದಿರುವ ಚಿತ್ರವನ್ನು ಪ್ರೆಸ್ ಕ್ಲಬ್ ಹಂಚಿಕೊಂಡಿದೆ.
ಇದನ್ನೂ ಓದಿ: ಎಲ್ಲರ ಮುಂದೆ ರೊಮ್ಯಾನ್ಸ್ ಮಾಡೋದು ಅಷ್ಟು ಸುಲಭದ ಮಾತಲ್ಲ: ನಟಿ ಅನುಪಮಾ ಪರಮೇಶ್ವರನ್
ಈ ಕುರಿತು ಪ್ರಕಟಣೆ ಹೊರಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾ, ದೆಹಲಿ ಪೊಲೀಸರ ಈ ಕ್ರಮದ ಬಗ್ಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಿಂದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುತ್ತೇವೆ. ನೊಂದ ಫೋಟೊ ಜರ್ನರ್ಲಿಸ್ಟ್ಗಳಿಗೆ ನ್ಯಾಯ ಸಿಕ್ಕರೆ, ಅವರು ಪೊಲೀಸರ ದೌರ್ಜನ್ಯವನ್ನು ಲೆಕ್ಕಿಸದೆ ನಿರ್ಭೀತಿಯಿಂದ ವೃತ್ತಿಪರ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಲಿದೆ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗ ಮತ್ತು ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಜಾರಿ ನಿರ್ದೇಶನಾಲಯದ ಕ್ರಮ ಖಂಡಿಸಿ ಎಎಪಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ.