ನವದೆಹಲಿ: ಅಯೋಧ್ಯಾ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದವನ್ನು ಸುಪ್ರೀಂಕೋರ್ಟ್ ಇತ್ಯರ್ಥಗೊಳಿಸಿ ತಿಂಗಳುಗಳೇ ಕಳೆದಿದೆ.
ವಿವಾದಿತ ಜಾಗದಲ್ಲಿ ಹಿಂದುಗಳು ರಾಮಮಂದಿರ ಕಟ್ಟಬೇಕು, ಮಸೀದಿ ಕಟ್ಟಲು ಅಯೋಧ್ಯೆಯಲ್ಲಿಯೇ ಬೇರೆ ಕಡೆಯಲ್ಲಿ ಮುಸ್ಲಿಮರಿಗೆ 5 ಎಕರೆ ಜಾಗ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಜವಾಬ್ದಾರಿಯನ್ನು ಕೇಂದ್ರ ಸರ್ಕಾರಕ್ಕೆ ವಹಿಸಿತ್ತು. ಅಲ್ಲದೆ ಮಂದಿರ ನಿರ್ಮಾಣಕ್ಕೆ ಟ್ರಸ್ಟ್ ರಚನೆ ಮಾಡಬೇಕು ಎಂದು ಸೂಚನೆ ನೀಡಿತ್ತು.
ಅದರಂತೆ ಕೇಂದ್ರ ಸರ್ಕಾರ ರಾಮಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ರಚಿಸಿದ್ದಾಗಿ ಇಂದು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯೋಜನೆ ರೂಪಿಸಿದ್ದೇವೆ. ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಎಂಬ ಹೆಸರಿನಲ್ಲಿ ಟ್ರಸ್ಟ್ ರಚನೆ ಮಾಡಲಾಗಿದೆ ಎಂದು ಪ್ರಧಾನಿ ತಿಳಿಸಿದರು.
ಕೇಂದ್ರ ಸರ್ಕಾರ ಟ್ರಸ್ಟ್ಗೆ 67.703 ಎಕರೆ ಭೂಮಿಯನ್ನು ನೀಡಲು ನಿರ್ಧಾರ ಮಾಡಿದೆ. ರಾಮಮಂದಿರ ನಿರ್ಮಾಣಕ್ಕೆ ಸಂಬಂಧಪಟ್ಟ ಎಲ್ಲ ನಿರ್ಧಾರಗಳನ್ನೂ ತೆಗೆದುಕೊಳ್ಳುವ ಅಧಿಕಾರ ಟ್ರಸ್ಟ್ಗೆ ಇರುತ್ತದೆ ಎಂದು ಹೇಳಿದರು.
ಅಲ್ಲದೆ ಮಸೀದಿ ನಿರ್ಮಾಣಕ್ಕಾಗಿ ಸುನ್ನಿ ವಕ್ಫ್ ಬೋರ್ಡ್ಗೆ 5 ಎಕರೆ ಜಾಗ ನೀಡಲು ಉತ್ತರ ಪ್ರದೇಶ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೆ ಅಯೋಧ್ಯಾ ಭೂವಿವಾದ ಅಂತಿಮ ತೀರ್ಪನ್ನು ಈ ದೇಶದ ಜನರು ಸ್ವೀಕರಿಸಿದ ರೀತಿಯನ್ನು ಮೋದಿ ಹೊಗಳಿದರು. ರಾಮಜನ್ಮಭೂಮಿ ತೀರ್ಪನ್ನು ಸುಪ್ರೀಂಕೋರ್ಟ್ ನೀಡಿದ ಬಳಿಕ ದೇಶದ ಜನರು ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ಹಾಗೂ ಕಾರ್ಯವಿಧಾನಗಳಲ್ಲಿ ತಮ್ಮ ನಂಬಿಕೆ ಎಷ್ಟು ಎಂಬುದನ್ನು ತೋರಿಸಿದ್ದಾರೆ. ಅವರೆಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.(ಏಜೆನ್ಸೀಸ್)