More

    ನೈತಿಕತೆ ಆಧಾರದ ಮೇಲೆ ಮತಯಾಚನೆ

    ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿ ಲೋಕಸಭಾ ಚುನಾವಣೆಯಲ್ಲಿ ನೈತಿಕತೆ ಆಧಾರದಲ್ಲಿ ಮತಯಾಚಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ತಿಳಿಸಿದರು.

    ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿದೆಯೇ ಎಂಬ ಬಗ್ಗೆ ಯುವ ಮತದಾರರು ಹಾಗೂ ಪಕ್ಷದ ತಂಡಗಳು ಸಂಪರ್ಕ ಮಾಡಿ ತಿಳಿಯುವ ಕೆಲಸ ಮಾಡುತ್ತಿವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಈಗಾಗಲೇ ಮಂಗಳೂರು-ಉಡುಪಿ-ಹಾಸನ ಜಿಲ್ಲೆಗಳ ಪ್ರವಾಸ ಮುಕ್ತಾಯಗೊಳಿಸಲಾಗಿದೆ. ಸ್ಥಳೀಯ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ಇತ್ಯರ್ಥಪಡಿಸಲಾಗುವುದು. ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಖರಿ ಬಗ್ಗೆ ಜನರಲ್ಲಿ ಸದಭಿಪ್ರಾಯ ವ್ಯಕ್ತವಾಗುತ್ತಿದೆ. ವಿರೋಧ ಪಕ್ಷಗಳು ಅಪಸ್ವರ ಎತ್ತಿರುವುದು ಬಿಟ್ಟರೆ ಜನರ ಅಭಿಪ್ರಾಯ ಮತ್ತೊಮ್ಮೆ ಮೋದಿ ಎಂಬುದಿದೆ ಎಂದು ತಿಳಿಸಿದರು.
    ಕಳೆದ 10 ವರ್ಷದ ಅಧಿಕಾರಾವಧಿಯಲ್ಲಿ ಭ್ರಷ್ಟಾಚಾರರಹಿತ ಆಡಳಿತ ನಡೆಸಿದ್ದಾರೆ. ಹಲವಾರು ವರ್ಷಗಳ ಕನಸಾಗಿದ್ದ ರಾಮ ಮಂದಿರ ನಿರ್ಮಾಣ ಕಾರ್ಯ ಮುಕ್ತಾಯವಾಗಿದೆ. ಅಭಿವೃದ್ಧಿಯಲ್ಲಿ 14ನೇ ಸ್ಥಾನದಲ್ಲಿದ್ದ ಭಾರತ ನರೇಂದ್ರ ಮೋದಿ ಅವರ ಆಡಳಿತದಲ್ಲಿ 5ನೇ ಸ್ಥಾನಕ್ಕೆ ಬಂದಿದ್ದು, ಇಡೀ ವಿಶ್ವವೇ ಕೊಂಡಾಡುವಂತಾಗಿದೆ ಎಂದು ಹೇಳಿದರು.
    ಯುವಕರಲ್ಲಿ ಪ್ರಧಾನಿ ಮೋದಿ ಬಗ್ಗೆ ಅಪಾರ ಅಭಿಮಾನ ಕಂಡುಬರುತ್ತಿದೆ. ಹಲವು ಜನಪರ ಯೋಜನೆಗಳ ಮೂಲಕ ದೇಶದ ಜನರ ಮನಸ್ಸು ಗೆದ್ದಿರುವ ಮೋದಿ ಅವರನ್ನು ರಾಜ್ಯ ಸರ್ಕಾರ ಟೀಕಿಸುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ವಿನಿಯೋಗಿಸುತ್ತಿರುವ ರಾಜ್ಯ ಸರ್ಕಾರ ಬರ ನಿರ್ವಹಣೆ, ಸಮರ್ಪಕ ವಿದ್ಯುತ್ ಸರಬರಾಜು ಮಾಡುವಲ್ಲಿ ವಿಫಲವಾಗಿದೆ. ಅವರ ಎಲ್ಲ ನ್ಯೂನತೆಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರವನ್ನು ದೂರುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.
    ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದು ಕೇಂದ್ರ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದೆ. ಮಹಿಳಾ ಮಸೂದೆ ಜಾರಿ, ತ್ರಿವಳಿ ತಲಾಖ್ ನಿಷೇಧ, ಜನೌಷಧ ಕೇಂದ್ರಗಳ ಸ್ಥಾಪನೆ ಮುಂತಾದವುಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಬದುಕು ಕಟ್ಟಿಕೊಟ್ಟಿದ್ದಾರೆ ಎಂದು ಹೇಳಿದರು.
    ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ, ಮುಖಂಡರಾದ ಸಿ.ಎಚ್.ಲೋಕೇಶ್, ಪುಷ್ಪರಾಜ್, ಎಚ್.ಎಸ್.ಪುಟ್ಟಸ್ವಾಮಿ, ಸೋಮಶೇಖರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts